ಕನ್ನಡಪ್ರಭ ವಾರ್ತೆ ಮಂಡ್ಯ
ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲೇ ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಿಯಾಂಕ್ ಖರ್ಗೆ ಹಿತೈಷಿ ಬಳಗದ ಸುಂಡಹಳ್ಳಿ ಮಂಜುನಾಥ್ ಒತ್ತಾಯಿಸಿದರು.ಮಂಡ್ಯದ ಪ್ರವಾಸಿ ಮಂದಿರದಲ್ಲಿ ಪ್ರಗತಿಪರರು, ಪ್ರಿಯಾಂಕ್ ಖರ್ಗೆ ಹಿತೈಷಿ ಬಳಗದ ವತಿಯಿಂದ ಸಭೆ ನೆಡೆಸಿ ಕಾಂಗ್ರೆಸ್ ಹೈಕಮಾಂಡ್ಗೆ ಹಕ್ಕೊತ್ತಾಯ ಮಂಡಿಸಿ ಮಾತನಾಡಿದರು.
ರಾಜ್ಯದಲ್ಲಿ ರಚನೆಯಾಗಲಿರುವ ಹೊಸ ಸಚಿವ ಸಂಪುಟದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಪ್ರಿಯಾಂಕ್ ಖರ್ಗೆ ವಿರೋಧ ಪಕ್ಷದಲ್ಲಿದ್ದ ವೇಳೆ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರ, ಪಿಎಸ್ಐ ಹಗರಣ, ಬಿಟ್ ಕಾಯಿನ್ ಸೇರಿದಂತೆ ಹಲವು ಹಗರಣಗಳ ಮೇಲೆ ಬೆಳಕು ಚೆಲ್ಲಿದ್ದರು. ಕೋಮುವಾದಿಗಳಿಗೆ ವಿರೋಧಿಯಾಗಿ ನಿಂತು ತಕ್ಕ ಉತ್ತರ ಕೊಡುವ ಮುಲಕ ಆರ್ಎಸ್ಎಸ್ ಹಾಗೂ ಬಿಜೆಪಿಗೆ ಸಿಂಹ ಸ್ವಪ್ನವಾಗಿದ್ದರು ಎಂದರು.ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ವೇಳೆ ಪ್ರಬುದ್ಧ, ಐರಾವತ ಯೋಜನೆಯನ್ನು ಜಾರಿಗೆ ತಂದು ಉತ್ತಮ ಕೆಲಸ ಮಾಡಿದ್ದಾರೆ. ಇವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಪಕ್ಷಕ್ಕೆ ಅನುಕೂಲವಾಗುತ್ತದೆ. ರಾಜ್ಯದಲ್ಲಿ ಜನಪರ ಆಡಳಿತ ನಡೆಸಲು ನೆರವಾಗಲಿದೆ. ಅದಕ್ಕಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದರು. ಸಭೆಯಲ್ಲಿ ಶಶಿಕುಮಾರ್, ಲವ, ಚೇತನ, ಹರೀಶ್, ಪ್ರಕಾಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.ಈಶ್ವರ್ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ
ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಅಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ಒತ್ತಾಯಿಸಿದರು.
ಈಶ್ವರ ಖಂಡ್ರೆ ಹಾಗೂ ಅವರ ತಂದೆ ಭೀಮಣ್ಣ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಘಟನೆ ಮತ್ತು ಸಮಾಜದ ಅಭ್ಯುದಯಕ್ಕೆ ಅಪಾರವಾಗಿ ಶ್ರಮಿಸಿದ್ದಾರೆ. ಮತ್ತು ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅಪರಿಮಿತವಾಗಿ ದುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.ಸಮುದಾಯದ ಮತ್ತೊಬ್ಬ ನಾಯಕ ಎಂ.ಬಿ.ಪಾಟೀಲ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ನಮ್ಮದೇನೂ ವಿರೋಧವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಂ.ಅರುಣ್ಕುಮಾರ್, ಮುಖಂಡರಾದ ಕೆಂಪಯ್ಯ, ಜಗದೀಶ್, ಗುಳ್ಳಪ್ಪ ಗೋಷ್ಠಿಯಲ್ಲಿದ್ದರು.