ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಫೆ.24 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ಹಬ್ಬ (ರಸಮಂಜರಿ ಕಾರ್ಯಕ್ರಮ)ವನ್ನು ಬೆಳಗಾವಿಯ ವಿವಿಧ ಕನ್ನಡಪರ ಸಂಘಟನೆಗಳು ಬಹಿಷ್ಕಾರ ಹಾಕಿವೆ. ಬೆಳಗಾವಿಯ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಒಕ್ಕೂರಲಿನಿಂದ ಅವರು ಈ ನಿರ್ಣಯ ಕೈಗೊಂಡಿದ್ದಾರೆ. ಕನ್ನಡ ಹಬ್ಬ ಆಚರಣೆಗೆ ವಿವಿಧ ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿ, ಸರ್ಕಾರದಿಂದ ಅನುದಾನ ತಂದಿವೆ. ಆದರೆ, ಜಿಲ್ಲಾಡಳಿತ ಕನ್ನಡ ಹಬ್ಬದ ಕುರಿತು ಯಾರಿಗೂ ಮಾಹಿತಿ ನೀಡದೇ ತರಾತುರಿಯಲ್ಲಿ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿಗಳು ಏಕಪಕ್ಷೀಯ ನಿರ್ಧಾರ ಮತ್ತು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಬೆಳಗಾವಿ ಜನತೆಗೆ ರಸಮಂಜರಿ ಕಾರ್ಯಕ್ರಮದ ಬಗ್ಗೆ ಕಿಂಚಿತ್ತೂ ಮಾಹಿತಿಯಿಲ್ಲ. ಕಳೆದ ಅಕ್ಟೋಬರ್ನಲ್ಲಿ ಬೆಳಗಾವಿ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರೊಂದಿಗೆ ಸಭೆ ನಡೆಸಿದ ಪರಿಣಾಮವಾಗಿ ₹50 ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಈ ಅನುದಾನದಲ್ಲಿ ಬೆಳಗಾವಿಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ನಿವೃತ್ತ ಅಧಿಕಾರಿಗಳನ್ನು ಸನ್ಮಾನಿಸಲು ಕನ್ನಡ ಸಂಘಟನೆಗಳು ತೀರ್ಮಾನಿಸಿದ್ದವು. ಆದರೆ, ಜಿಲ್ಲಾಧಿಕಾರಿಗಳು ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ. ₹ 50 ಲಕ್ಷ ಅನುದಾನದವನ್ನು ದುಂದುವೆಚ್ಚ ಮಾಡುವ ಉದ್ದೇಶದಿಂದ ಏಕಾಏಕಿ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ದೂರಿದರು.
ಅಲ್ಲದೇ, ಸಭೆಯ ಬಳಿಕ ನಗರದ ಕನ್ನಡ ಸಾಹಿತ್ಯ ಭವನದ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಯಾರು ಭಾಗಿಯಾಗುವುದಿಲ್ಲ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮಹಾದೇವ ತಳವಾರ, ಅಶೋಕ ಚಂದರಗಿ, ನಗರ ಸೇವಕ ರಮೇಶ ಸೊಂಟಕ್ಕಿ, ಶ್ರೀನಿವಾಸ ತಾಳುಕರ, ವಾಜಿದ ಹಿರೇಕೋಡಿ, ಬಲರಾಮ ಮಾಸೇನಟ್ಟಿ, ಮೈನುದ್ದೀನ ಮಕಾನದಾರ, ದೇವೇಂದ್ರ ತಳವಾರ, ಮಹೇಶ ಶೀಗಿಹಳ್ಳಿ, ಶಿವು ದೇವುರ, ಗೌಸ್ ಸನದಿ, ಸಂತೋಷ ತಳ್ಳಿಮನಿ, ನಾಗೇಶ ಕೊಪ್ಪದ, ಬಾಳೇಶ ಗುಡಗನಟ್ಟಿ ಹಾಗೂ ಪ್ರಕಾಶ ಮೂಕನವರ ಇತರರು ಉಪಸ್ಥಿತರಿದ್ದರು.
ಫೋಟೋ ಶೀರ್ಷಿಕೆ
ಬೆಳಗಾವಿ ಜಿಲ್ಲಾಧಿಕಾರಿಗಳು ಕನ್ನಡಪರ ಸಂಘಟನೆ ಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಏಕಾಏಕಿ ಕನ್ನಡ ಹಬ್ಬ ಕಾರ್ಯಕ್ರಮ ಆಯೋಜಿಸಿರುವ ಕ್ರಮ ಖಂಡಿಸಿ, ಬೆಳಗಾವಿ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.