ಸಾರಾಂಶ
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡಿಸಿ ಗುರುವಾರ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ.
ಕನ್ನಡಪ್ರಭ ವಾರ್ತೆ ಬೆಳಗಾವಿ
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡಿಸಿ ಗುರುವಾರ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಕನ್ನಡ ನಾಡು, ನುಡಿ, ಜಲದ ವಿಷಯ ಬಂದಾಗ ಹೋರಾಟ ಮಾಡುವ ಕನ್ನಡ ಹೋರಾಟಗಾರರ ಮೇಲೆ ಸರಕಾರ ಬಂಧನ ಮಾಡುವುದು ಸರಿಯಲ್ಲ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆಗೊಳಿಸದಿದ್ದರೇ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಅಲ್ಲದೆ, ಬೆಳಗಾವಿಯಲ್ಲಿಯೂ ಮರಾಠಿ, ಆಂಗ್ಲ ಭಾಷೆಯಲ್ಲಿರುವ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಆಗಬೇಕು. ಇಲ್ಲದಿದ್ದರೇ ಸಾವಿರಾರು ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಆ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಾರಾಯಣಗೌಡ ಅವರನ್ನು ಬಂಧಿಸಿದ ಪೊಲೀಸರ ನಡೆಯನ್ನು ಖಂಡಿಸಿ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಪೊಲೀಸರು ಟೈಯರ್ ಕಸೆದುಕೊಂಡು ಸ್ಥಳದಲ್ಲಿ ಬಿಗಿ ಬಂದೋಬಸ್ತ ಏರ್ಪಡಿಸಿದ್ದಾರೆ.ವಾಜೀದ್ ಹಿರೇಕುಡಿ, ಅಭಿಲಾಷ, ಕಸ್ತೂರಿ ಬಾವಿ, ಮಹೇಶ ಶಿಗಿಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.