ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಪ್ರೊ.ಬಿ.ಕೃಷ್ಣಪ್ಪ: ಡಾ.ವಿಜಯಾದೇವಿ

| Published : Jul 15 2024, 01:58 AM IST

ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಪ್ರೊ.ಬಿ.ಕೃಷ್ಣಪ್ಪ: ಡಾ.ವಿಜಯಾದೇವಿ
Share this Article
  • FB
  • TW
  • Linkdin
  • Email

ಸಾರಾಂಶ

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಭಾನುವಾರ ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ.ಬಿ.ಕೃಷ್ಣಪ್ಪನವರ ೮೭ನೇ ಜನ್ಮ ದಿನಾಚರಣೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಪ್ರೊ.ಬಿ.ಕೃಷ್ಣಪ್ಪನವರು ಮಾನವೀಯ ಮೌಲ್ಯವುಳ್ಳ ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದರು, ಅವರ ಹೋರಾಟಗಳು, ಆದರ್ಶ ಸಮಾಜವನ್ನು ಒಗ್ಗೂಡಿಸುವ ಶಕ್ತಿಯನ್ನು ಹೊಂದಿವೆ ಎಂದು ಸಾಹಿತಿ, ಎಮೆರಿಟಸ್ ಡಾ.ವಿಜಯಾದೇವಿ ಹೇಳಿದರು.

ಅವರು ನಗರದ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಭಾನುವಾರ ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ.ಬಿ.ಕೃಷ್ಣಪ್ಪನವರ ೮೭ನೇ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನಗರದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕಿ ಆ ಮೂಲಕ ಹೋರಾಟಕ್ಕೆ ಶಕ್ತಿ ತುಂಬುವ ಜೊತೆಗೆ ಈ ನಗರದ ಹೆಸರು ಎಲ್ಲೆಡೆ ಪ್ರಜ್ವಲಿಸುವಂತೆ ಮಾಡಿದ್ದರು. ಅವರ ಹೋರಾಟಗಳಲ್ಲಿ ಮಾನವೀಯ ಮೌಲ್ಯಗಳು, ಸಮಾನತೆ ಪರಿಕಲ್ಪನೆಗಳು ಸಾಮಾಜಿಕ ಸುಧಾರಣೆಗೆ ಪೂರಕವಾಗಿದ್ದವು. ಈ ಹಿನ್ನಲೆಯಲ್ಲಿ ನಾವೆಲ್ಲರೂ ಪ್ರಸ್ತುತ ಪ್ರೊ. ಬಿ. ಕೃಷ್ಣಪ್ಪನವರನ್ನು ನೆನಪು ಮಾಡಿಕೊಳ್ಳಲು ಕಾರಣವಾಗಿವೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ್ ಮಾತನಾಡಿ, ನಮ್ಮೆಲ್ಲರ ಹೋರಾಟಗಳಿಗೆ ಪ್ರೊ.ಬಿ.ಕೃಷ್ಣಪ್ಪನವರು ಇಂದಿಗೂ ಸ್ಫೂರ್ತಿದಾಯಕರಾಗಿದ್ದಾರೆ. ಈ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದಲ್ಲಿ ನೀಡಲಾಗಿರುವ ಹಕ್ಕನ್ನು ಯಾವ ರೀತಿ ಪಡೆದುಕೊಳ್ಳಬೇಕು. ಸಂವಿಧಾನದ ಆಶಯಗಳು, ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ನಮ್ಮೆಲ್ಲರ ನಾಯಕರಾಗಿ ಪ್ರೊ.ಬಿ.ಕೃಷ್ಣಪ್ಪ ಇಂದಿಗೂ ನಮ್ಮೆಲ್ಲರ ಕಣ್ಮುಂದೆ ಉಳಿದು ಕೊಂಡಿದ್ದಾರೆ ಎಂದರು.

ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಸಿ.ಜಯಪ್ಪ ಹೆಬ್ಬಳಗೆರೆ ಪ್ರಾಸ್ತಾವಿಕವಾಗಿ ಮಾತನಾಡಿ, ೭೦ರ ದಶಕದಲ್ಲಿ ನಗರದಲ್ಲಿ ದಲಿತ ಸಮುದಾಯವರ ಮೇಲೆ ನಡೆ ಯುತ್ತಿದ್ದ ಶೋಷಣೆಗಳ ವಿರುದ್ಧ ಹೋರಾಟ ನಡೆಸಲು ಸಿಡಿದೆದ್ದ ಪ್ರೊ.ಕೃಷ್ಣಪ್ಪನವರು ಈ ಸಂಘಟನೆಯನ್ನು ಹುಟ್ಟುಹಾಕಿದರು. ಆ ಮೂಲಕ ರಾಜ್ಯಾದ್ಯಂತ ಹಲವಾರು ಹೋರಾಟಗಳನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಅನ್ಯಾಯದ ವಿರುದ್ಧ ಶೋಷಿತರ ಪರ ಧ್ವನಿಯಾಗಿದ್ದರು. ವಿಭಿನ್ನ ಕಾರ್ಯಕ್ರಮಗಳ ಆಯೋಜನೆ ಮೂಲಕ ಇವರನ್ನು ಪ್ರತಿ ವರ್ಷ ಸ್ಮರಿಸಿಕೊಂಡು ಬರಲಾಗುತ್ತಿದೆ ಎಂದರು.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಪ್ರೊ.ಬಿ.ಕೃಷ್ಣಪ್ಪನವರ ಪ್ರಶಸ್ತಿ ಪ್ರದಾನ ಮಾಡಿದರು. ಒಕ್ಕೂಟದ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್, ಉದ್ಯಮಿ ಬಿ.ಕೆ.ಜಗನ್ನಾಥ್, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಜಿಲ್ಲಾ ಸಂಚಾಲಕ ಚಿನ್ನಯ್ಯ, ತಾಲೂಕು ಸಂಚಾಲಕ ಕೆ. ರಂಗನಾಥ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಪೃಥ್ವಿರಾಜ್, ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಕೆ.ಗಂಗಾಧರ ಮೂರ್ತಿ, ಎನ್‌ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಜೇಜಿನ ಪ್ರಾಂಶುಪಾಲ ಡಾ. ಧನಂಜಯ, ಮುಖಂಡರಾದ ದಿಲ್‌ದಾರ್, ಫೀರ್‌ಷರೀಫ್, ಈಶ್ವರಪ್ಪ, ಕಾಣಿಕ್‌ ರಾಜ್, ಎನ್. ಪ್ರಸನ್ನಕುಮಾರ್, ಡಿಎಸ್‌ಎಸ್ ಮಹಿಳಾ ಪ್ರಮುಖರಾದ ಶಾಂತಿ, ಕೂಡ್ಲಿಗೆರೆ ಎಂ. ರೇಖಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಎಂ.ಈಶ್ವರಪ್ಪ ಕಾರ್ಯಕ್ರಮ ನಿರೂಪಿಸಿದರು.