ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಪ್ರೊ. ಎಂ.ಆರ್. ಗಂಗಾಧರ್‌ ಸಲಹೆ

| Published : Nov 20 2025, 12:45 AM IST

ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಪ್ರೊ. ಎಂ.ಆರ್. ಗಂಗಾಧರ್‌ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು. ಅಧ್ಯಯನ ಜ್ಞಾನದೊಂದಿಗೆ ತಮ್ಮಲ್ಲಿರುವ ಪ್ರತಿಭೆ ತೋರಲು ಇದೊಂದು ಉತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸಧೃಢರಾಗಬಹುದು. ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ನೆರವಾಗಲಿವೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಪಾಲ್ಗೊಳ್ಳುವ ಮೂಲಕ ವಿಶ್ವವಿದ್ಯಾನಿಲಯದಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕುಲಪತಿ ಪ್ರೊ. ಎಂ.ಆರ್. ಗಂಗಾಧರ್ ಅವರು ಸಲಹೆ ಮಾಡಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕಾಗಿ ವಿಶ್ವ ವಿದ್ಯಾನಿಲಯ ಅವಕಾಶಗಳನ್ನು ಕಲ್ಪಿಸುತ್ತಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳ ಸಂಪೂರ್ಣ ವೆಚ್ಚವನ್ನು ವಿವಿಯೇ ಭರಿಸಲಿದೆ. ಹೀಗೆ ವಿದ್ಯಾರ್ಥಿಗಳನ್ನು ಉತ್ತೇಜಿಸಲಾಗುತ್ತಿದೆ ಎಂದರು.

ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕರಾದ ಡಾ.ಪಿ. ಕೃಷ್ಣಯ್ಯ ಅವರು ಮಾತನಾಡಿ, ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು. ಅಧ್ಯಯನ ಜ್ಞಾನದೊಂದಿಗೆ ತಮ್ಮಲ್ಲಿರುವ ಪ್ರತಿಭೆ ತೋರಲು ಇದೊಂದು ಉತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸಧೃಢರಾಗಬಹುದು. ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ನೆರವಾಗಲಿವೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎಸ್. ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರ ವಿ.ವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಶಾಂತರಾಜು, ಬೋಗಾಪುರ ವಸತಿಯುಕ್ತ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೇವರಾಜು, ಕ್ರೀಡಾ ಸಮಿತಿಯ ಸದಸ್ಯರಾದ ಜಿ. ಬಂಗಾರು, ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.