ಕನ್ನಡಪ್ರಭ ವಾರ್ತೆ ವಿಜಯಪುರ

ಮಹಿಳೆಯರು ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ವ್ಯವಹಾರ ಮತ್ತು ವಾಣಿಜ್ಯ ವಿಭಾಗ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರಟರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವೃತ್ತಿಪರ ಜಾಗೃತಿ ಕಾರ್ಯಕ್ರಮ ಕುರಿತ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2026ರ ಅಂಕಿ-ಅಂಶಗಳ ಪ್ರಕಾರ ದಲಿತ ಸಮುದಾಯದ ಸುಮಾರು ಶೇ.38 ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಷ್ಟೇ ಅಲ್ಲದೇ ಇಂದಿನ ದಿನಗಳಲ್ಲಿ ಮೊಬೈಲ್ ತಂತ್ರಜ್ಞಾನದ ಮೂಲಕ ಜಗತ್ತಿನ ಆಗುಹೋಗುಗಳನ್ನು ತಿಳಿದುಕೊಳ್ಳುವ ಅವಕಾಶ ದೊರೆಯುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರ ಪ್ರಗತಿ ಕಂಡುಬಂದಿದೆ. ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದು, ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂದರು.ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷೆ ಡಾ.ಮಲ್ಲಮ್ಮ ಯಾಳವಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುತ್ತಿದ್ದರೂ ತಕ್ಕ ಜ್ಞಾನವನ್ನು ಸಂಪಾದಿಸುವಲ್ಲಿ ಹಿಂದೆ ಬೀಳುತ್ತಿರುವುದು ಆತಂಕಕಾರಿಯಾಗಿದೆ. ಮಹಿಳೆಯರು ಕೇವಲ ಶಿಕ್ಷಣ ಪಡೆದರೆ ಸಾಕಾಗುವುದಿಲ್ಲ. ಅವರು ಆರ್ಥಿಕವಾಗಿ ಸ್ವಾವಲಂಬಿಯಾಗುವುದರ ಜೊತೆಗೆ ಕಾನೂನುಬದ್ಧ ಹಕ್ಕುಗಳ ಬಗ್ಗೆ ಅರಿವು ಹೊಂದಬೇಕು ಎಂದರು.ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಇಂದಿನ ದಿನಗಳಲ್ಲಿ ಸಾಧನೆ ಮಾಡಲು ಯಾವುದೇ ಅಡೆತಡೆಗಳಿಲ್ಲ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ನಮ್ಮ ಮುಂದೆ ಉದಾಹರಣೆಯಾಗಿ ಇದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಕನಸುಗಳನ್ನು ಹೊತ್ತು ವಿಶ್ವವಿದ್ಯಾನಿಲಯಕ್ಕೆ ಬಂದಿದ್ದೀರಿ. ಆ ಕನಸುಗಳು ನೆರವೇರಿಸಿ ವಿಶ್ವವಿದ್ಯಾಲಯದ ಕೀರ್ತಿ ಹೆಚ್ಚಿಸಬೇಕು ಎಂದು ಪ್ರೇರೇಪಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳಗಾವಿಯ ಐಸಿಎಸೈ ಶಾಖೆಯ ಅಧ್ಯಕ್ಷ ಸಿ.ಎಸ್.ತುಕಾರಾಮ ಜಾಧವ ಮಾತನಾಡಿ, ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳೂ ಅತ್ಯಂತ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಐಸಿಎಸೈ ಬೆಳಗಾವಿ ಶಾಖೆಯ ಸಿ.ಎಸ್.ಅಪ್ಪಣ್ಣ ಮಾತನಾಡಿ, ಕಂಪನಿ ಸೆಕ್ರೆಟರಿ ಕೋರ್ಸ್, ಅದರ ಅವಕಾಶಗಳು ಹಾಗೂ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಂಪ್ಲೈ ಗ್ರೋ ಅಡ್ವೆಸರ್ಸ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ಸಿ.ಹೆಚ್.ಮಹಾರುದ್ರಪ್ಪ ಜಡಿ ಮಾತನಾಡಿ, ಕನಸುಗಳು ದೊಡ್ಡದಾಗಿದ್ದರೆ ಸಾಧನೆಯೂ ದೊಡ್ಡದಾಗುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ತಮ್ಮ ಗುರಿಗಳತ್ತ ಶ್ರಮಿಸಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದರು.ಕಾರ್ಯಕ್ರಮದಲ್ಲಿ ವ್ಯವಹಾರ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಎನ್.ಎಲ್.ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಲಕ್ಷ್ಮೀದೇವಿ.ವೈ, ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳು, ಸಂಶೋಧನಾ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವ್ಯವಹಾರ ಮತ್ತು ವಾಣಿಜ್ಯ ವಿಭಾಗದ ಪ್ರೊ.ಅನಿತಾ ನಾಟಿಕಾರ ಸ್ವಾಗತಿಸಿದರು. ಸಂಶೋಧನಾ ವಿದ್ಯಾರ್ಥಿನಿ ಮೇಘಾ ಹಿರೇಮಠ ನಿರೂಪಿಸಿದರು. ಸಂಗೀತ ಮತ್ತು ಸೌಂದರ್ಯ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಚಂದ್ರಶೇಖರ ಮಠಪತಿ ವಂದಿಸಿದರು.