ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಪೂರಕವಾಗಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ 2025-26ನೇ ಸಾಲಿನಲ್ಲಿ 1.07 ರು. ಕೋಟಿ ಲಾಭ ಗಳಿಸಿ, ಸದಸ್ಯರಿಗೆ ಶೇ.22ರಷ್ಟು ಡಿವಿಡೆಂಡ್ ಘೋಷಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ತಿಳಿಸಿದರು.

ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಸಂಘದ ಪ್ರಧಾನ ಕಚೇರಿಯ ಸಪ್ತವರ್ಣ ಸಭಾಂಗಣದಲ್ಲಿ ಶನಿವಾರ ನಡೆದ 95ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಘ 29.16 ಲಕ್ಷ ರು. ಪಾಲು ಬಂಡವಾಳ, 7.94 ಕೋಟಿ ರು. ವಿವಿಧ ನಿಧಿಗಳನ್ನು ಹೊಂದಿದೆ. ಸಂಘದ ಠೇವಣಿ ಮೊತ್ತ ಹಿಂದಿನ ಸಾಲಿನ ಅಂತ್ಯದಲ್ಲಿದ್ದ 94.33 ಕೋಟಿ ರು.ಯಿಂದ 108.08 ಕೋಟಿ ರು.ಗೆ ಏರಿಕೆಯಾಗಿದೆ. ಸಾಲ ಮುಂಗಡ ಮೊತ್ತ 82.90 ಕೋಟಿ ರು.ಯಿಂದ 91.67 ಕೋಟಿ ರು.ಗೆ ಹೆಚ್ಚಳವಾಗಿದೆ. ಇದರೊಂದಿಗೆ ಸಂಘದ ಒಟ್ಟು ವ್ಯವಹಾರ ಹಿಂದಿನ ಸಾಲಿನ 177.23 ಕೋಟಿ ರು.ಯಿಂದ 199.75 ಕೋಟಿ ರು.ಗೆ ಏರಿಕೆಯಾಗಿದೆ. ಸಂಘ ಪ್ರಸ್ತುತ ನಾಲ್ಕು ಶಾಖೆಗಳನ್ನು ಹೊಂದಿದ್ದು, ಮಂಗಳೂರಿನಲ್ಲಿ ಎರಡು, ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಸದಸ್ಯರಿಗೆ ಇನ್ನಷ್ಟು ಹತ್ತಿರವಾಗುವ ಉದ್ದೇಶದಿಂದ ತಾಲೂಕುವಾರು ಶಾಖೆಗಳನ್ನು ತೆರೆಯುವ ಯೋಜನೆ ರೂಪಿಸಲಾಗಿದೆ ಎಂದರು.

ಸತತ 9 ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ:


ಸಂಘದ ಪ್ರಗತಿಯನ್ನು ಗುರುತಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್, ಕಳೆದ ಎಂಟು ವರ್ಷಗಳಿಂದ ಸತತವಾಗಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. 2017-18ರಿಂದ 2024-25ರವರೆಗೆ ಸತತ ಎಂಟು ಬಾರಿ ಪ್ರಶಸ್ತಿ ಪಡೆದಿರುವ ಸಂಘ 2025-26ನೇ ಸಾಲಿನಲ್ಲೂ ಎಸ್‌ಸಿಡಿಸಿಸಿ ಬ್ಯಾಂಕಿನ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ. ಇದರೊಂದಿಗೆ ಸಂಘ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯನ್ನು ಸತತ 9ನೇ ಬಾರಿಗೆ ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಸಂಘ ನಿರಂತರವಾಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಸಹಕಾರ ರಂಗದ ಅಗ್ರಗಣ್ಯ ನಾಯಕರಾದ ‘ಸಹಕಾರ ರತ್ನ’ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಸೂಕ್ತ ಸಲಹೆ, ಮಾರ್ಗದರ್ಶನ ಹಾಗೂ ಪ್ರೋತ್ಸಾಹವೇ ಪ್ರಮುಖ ಕಾರಣವಾಗಿದೆ ಎಂದರು.

ಪ್ರತಿಭಾ ಪುರಸ್ಕಾರ:

ಸಂಘ ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವ ಸದಸ್ಯರ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿದೆ. ಈ ಬಾರಿ ಶೇ.70ಕ್ಕಿಂತ ಅಧಿಕ ಅಂಕಗಳೊಂದಿಗೆ ತೇರ್ಗಡೆಯಾದ 47 ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಪ್ರತಿಭಾ ಪುರಸ್ಕಾರ ನೆರವೇರಿಸಿದರು.

ಸಂಘದ ಉಪಾಧ್ಯಕ್ಷ ರಾಘವ ಆರ್.ಉಚ್ಚಿಲ್, ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ., ವಿಶ್ವೇಶ್ವರ ಐತಾಳ್, ಜಯಪ್ರಕಾಶ್ ರೈ ಸಿ., ವಿಶ್ವನಾಥ ಕೆ.ಟಿ., ಚಂದ್ರಕಲಾ ಕೆ., ಮೋಹನ್ ಎನ್., ವಿಶ್ವನಾಥ್ ಅಮೀನ್, ಗೀತಾಕ್ಷಿ, ಕಿರಣ್ ಕುಮಾರ್ ಶೆಟ್ಟಿ, ನಿಶಿತಾ ಜಯರಾಮ್, ಪ್ರೇಮ್ ರಾಜ್ ಭಂಡಾರಿ ಇದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವಾಗತಿಸಿ, ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು. ಉಪಾಧ್ಯಕ್ಷ ರಾಘವ ಆರ್.ಉಚ್ಚಿಲ್ ವಂದಿಸಿದರು.

---