ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಸರ್ಕಾರದ ಪ್ರಸ್ತಾವನೆಗೆ ಸರ್ಕಾರಿ ಶಾಲೆ ಉಳಿಸಿ ಆಂದೋಲನದ ಹೋರಾಟಗಾರ ಪ್ರಕಾಶ್ ಅಂಚನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ: ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಸರ್ಕಾರದ ಪ್ರಸ್ತಾವನೆಗೆ ಸರ್ಕಾರಿ ಶಾಲೆ ಉಳಿಸಿ ಆಂದೋಲನದ ಹೋರಾಟಗಾರ ಪ್ರಕಾಶ್ ಅಂಚನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜಮುಖಿ ಸಂಘ-ಸಂಸ್ಥೆಗಳು, ಶಿಕ್ಷಣ ಪ್ರೇಮಿಗಳು, ದಾನಿಗಳು ಹಾಗೂ ಜನಪ್ರತಿನಿಧಿಗಳು ದತ್ತು ಪಡೆಯುವುದು ಸ್ವಾಗತಾರ್ಹ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವುದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲಗಳು ಉಂಟಾಗುವ ಸಾಧ್ಯತೆ ಇದೆ ಎಂದು ಅವರು, ಇದು ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವೇ ಎಂದು ಪ್ರಶ್ನಿಸಿದ್ದಾರೆ.ಖಾಸಗಿ ಶಾಲೆಗಳ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನಿಯೋಜಿಸಿದರೆ ಅವರ ಸೇವಾ ನಿಯಮ, ತರಬೇತಿ, ಆಡಳಿತಾತ್ಮಕ ನಿಯಂತ್ರಣ ಹಾಗೂ ಬೋಧನಾ ವಿಧಾನಕ್ಕೆ ಸಂಬಂಧಿಸಿದ ಪ್ರಶ್ನೆಗಳು ಉದ್ಭವಿಸಲಿದ್ದು, ಇದರ ಪರಿಣಾಮ ಮಕ್ಕಳ ಶಿಕ್ಷಣದ ಮೇಲೂ ಬೀಳಬಹುದು ಎಂದು ಅವರು ಹೇಳಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳುವ ಮುನ್ನ ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ಸಾರ್ವಜನಿಕರೊಂದಿಗೆ ಸಮಗ್ರ ಚರ್ಚೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಸ್ತಾವನೆ ಸರ್ಕಾರ ತನ್ನ ಶಿಕ್ಷಣದ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳ ಕಡೆಗೆ ವರ್ಗಾಯಿಸುತ್ತಿರುವ ಸಂದೇಶ ನೀಡುವಂತಿದೆ. ಶಿಕ್ಷಣದ ಹಕ್ಕು ಕಾಯ್ದೆಯಂತೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದ್ದು, ಖಾಸಗಿ ಶಾಲೆಗಳಿಗೆ ದತ್ತು ನೀಡುವ ಬದಲು ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸುವತ್ತ ಸರ್ಕಾರ ಗಮನಹರಿಸಬೇಕು ಎಂದು ಪ್ರಕಾಶ್ ಅಂಚನ್ ಒತ್ತಾಯಿಸಿದ್ದಾರೆ.