ಶಿಕ್ಷಕರ ಸೇವೆ ಅತ್ಯಂತ ಶ್ರೇಷ್ಠವಾದದ್ದು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತವರು ಉನ್ನತ ಸ್ಥಾನಕ್ಕೇರಲು ಶಿಕ್ಷಕರ ಸೇವೆ ಪ್ರಮುಖ ಕಾರಣವಾಗಿದೆ.

ಅಂಕೋಲಾ:

ತಾಲೂಕಿನ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲು ಜಿಲ್ಲಾ ಉಸ್ತುವಾರಿ ಸಚಿವರ ನಿಧಿಯಿಂದ ₹1 ಕೋಟಿ ಅನುದಾನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಘೋಷಿಸಿದರು.

ಪಟ್ಟಣದ ನಾಡವರ ಸಭಾಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಿಜಿಟಲ್ ಗ್ರಂಥಾಲಯ ನಿರ್ಮಾಣಕ್ಕೆ ಒಟ್ಟು ₹2 ಕೋಟಿ ವೆಚ್ಚವಾಗಲಿದ್ದು, ಉಳಿದ ಮೊತ್ತದ ಅನುದಾನಕ್ಕಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಶಿಕ್ಷಕರ ಸೇವೆ ಅತ್ಯಂತ ಶ್ರೇಷ್ಠವಾದದ್ದು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತವರು ಉನ್ನತ ಸ್ಥಾನಕ್ಕೇರಲು ಶಿಕ್ಷಕರ ಸೇವೆ ಪ್ರಮುಖ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಸತೀಶ್ ಸೈಲ್ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಣ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಿ ಕೇವಲ 10000ಗಳನ್ನು ಅತಿಥಿ ಶಿಕ್ಷಕರಿಗೆ ನೀಡುವ ಪದ್ಧತಿ ಇದೆ. ಸಾಮಾನ್ಯ ವೇತನವನ್ನಾದರೂ ಅವರಿಗೆ ನೀಡುವಂತೆ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿದೆ. ಅವರು ಶಿಕ್ಷಣವಂತರು ಅವರು ಶಿಕ್ಷಣವನ್ನು ಪೂರೈಸಿರುತ್ತಾರೆ. ಅಧಿಕೃತವಾಗಿ ಸರ್ಕಾರಿ ನೌಕರಿಯಲ್ಲಿರುವವರಿಗೆ ಸಂಬಳವನ್ನು ನೀಡುವ ನಾವು ಅತಿಥಿ ಶಿಕ್ಷಕರನ್ನು ಮತ್ತು ಅತಿಥಿ ಉಪನ್ಯಾಸಕರನ್ನು ಗಣನೆಗೆ ತೆಗೆದುಕೊಂಡು ಅವರಿಗೆ ಹೆಚ್ಚಿನ ಗೌರವದನ ದೊರಕುವಂತೆ ಮಾಡಬೇಕೆಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸತೀಶ್ ನಾಯ್ಕ, ಜಿಪಂ ಸಿಇಒ ಡಾ. ದಿಲೀಷ್ ಶಶಿ, ಎಸ್ಪಿ ದೀಪನ್ ಎಂ.ಎನ್., ಉಪ ನಿರ್ದೇಶಕ ಏನ್ ಆರ್ ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಲಲಕ್ಷ್ಮೀ ಪಾಟೀಲ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂಜಿ ನಾಯ್ಕ, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ನಾಯಕ, ಪ್ರಮುಖರಾದ ಪ್ರಭಾಕರ್ ಬಂಟ್ ಎಂ.ಎಲ್.ಹೆಗಡೆ, ಸುಧೀರ್ ನಾಯಕ, ಸಂಜೀವ್ ಬಸ್ತಿವಾಡೆ, ಗಿರೀಶ್ ನಾಯಕ, ರಾಜೇಶ ನಾಯಕ, ವಿಷ್ಣು ಪ್ರಸಾದ ಪಾಂಡುರಂಗ ಗೌಡ ಉಪಸ್ಥಿತರಿದ್ದರು. ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ದೇವಾನಂದ ಗಾಂವಕರ ಉಪನ್ಯಾಸ ನೀಡಿದರು.

ಪುನೀತ್ ಸಂಗಡಿಗರಿಂದ ಯಕ್ಷಗಾನ ಹೊಸ ಹುರುಪು ನೀಡಿತು. ರಾಮನಾಥ್ ಸಂಗಡಿಗರು ಪ್ರಾರ್ಥಿಸಿ ನಾಡಗೀತೆ ಪ್ರಸ್ತುತಪಡಿಸಿದರು, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ನಾಯಕ್ ಸನ್ಮಾನಿತರ ಯಾದಿ ಪ್ರಸ್ತುತಪಡಿಸಿದರು. ರಾಜೇಶ್ ಮಾಸ್ಟರ್ ವೀಣಾ ಹೆಗಡೆ ನಿರ್ವಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ, ಮಂಗಳಲಕ್ಷ್ಮಿ ಪಾಟೀಲ್ ವಂದಿಸಿದರು. ಸಹಪಠ್ಯ ಚಟುವಟಿಕೆಗಳಯಾದಿಯನ್ನು ಸಿ ಆರ್ ಪಿ ರಾಜಲಕ್ಷ್ಮಿ ವಾಚಿಸಿದರು. ನಿವೃತ್ತ ಸನ್ಮಾನಿತರಯಾದಿಯನ್ನು ಭಾಸ್ಕರ ನಾಯಕ ವಾಚಿಸಿದರು. ಜಿಲ್ಲೆಯ ಹಲವು ಶಿಕ್ಷಕರು, ನಿವೃತ್ತ ಶಿಕ್ಷಕರು ಜಿಲ್ಲಾ ಸಂಘ ತಾಲೂಕು ಸಂಘಗಳ ಪದಾಧಿಕಾರಿಗಳು ಶಿಕ್ಷಕೇತರ ಸಿಬ್ಬಂದಿಗಳು ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.