ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಸಂವಿಧಾನಕ್ಕೆ ವಿರುದ್ಧವಾಗಿ ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿ ಮುಖ್ಯ ಮುಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅವಕಾಶ ನೀಡಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ನಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಳಗ್ಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಘೋಷಣೆಗಳ ಸಹಿತವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿ, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸುವ ಮೂಲಕ ಮುಖ್ಯ ಮಂತ್ರಿಗಳ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಶನ್ಗೆ ಅವಕಾಶ ನೀಡಿರುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕೆಲ ಕಾಲ ಧರಣಿ ಮುಷ್ಕರ ನಡೆದ ಸಂದರ್ಭ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಸದಸ್ಯರಾದ ಟಿ.ಪಿ.ರಮೇಶ್ ಮಾತನಾಡಿ, ಸಾಮಾಜಿಕ ನ್ಯಾಯದ ಹರಿಕಾರ, ದೀನ ದಲಿತರು, ದುರ್ಬಲ ವರ್ಗದ ಆಶಾಕಿರಣವಾದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸುವ ಷಡ್ಯಂತ್ರ ನಡೆಯುತ್ತಿರುವುದಾಗಿ ಆರೋಪಿಸಿದರು.ಕೇಂದ್ರ ಸರ್ಕಾರದ ಬಹಳಷ್ಟು ಹಗರಣಗಳನ್ನು ತೆರೆದಿಟ್ಟು ಪ್ರಧಾನಿ ಮೋದಿ ಅವರನ್ನು ಅಲುಗಾಡಿಸಿರುವ ನಾಯಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರನ್ನು ಮುಖ್ಯ ಮಂತ್ರಿ ಸ್ಥಾನದಿಂದ ಕೆಳಕ್ಕಿಳಿಸುವ ಪ್ರಯತ್ನವಾಗಿ ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡು, ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕಿತ್ತೊಗೆಯುವ ಹುನ್ನಾರ ನಡೆಸಿರುವುದಾಗಿ ತೀಕ್ಮ್ಣವಾಗಿ ನುಡಿದು, ಜನಪರವಾದ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಜೀವತುಂಬುವ ಕೆಲಸವನ್ನು ನಾವಿಂದು ಮಾಡುತ್ತಿರುವುದಾಗಿ ತಿಳಿಸಿದರು.
ರಾಜೀನಾಮೆ ನೀಡದಿರಿ- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್ಗೆ ಅವಕಾಶವನ್ನಿಂದು ನೀಡಲಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಕೂಡದೆಂದು ದೃಢವಾಗಿ ನುಡಿದರು.ಮನವಿ ಸಲ್ಲಿಕೆ- ಕೊಡಗು ಜಿಲ್ಲಾ ಕಾಂಗ್ರೆಸ್ ಪರವಾಗಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಪ್ರಮುಖ ಏಳು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಅವರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು.
ಮನವಿಯಲ್ಲಿ ಪ್ರಮುಖವಾಗಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅವಕಾಶ ನೀಡಿರುವ ಆದೇಶವನ್ನು ಹಿಂದಕ್ಕೆ ಪಡೆಯಲು ರಾಜ್ಯಪಾಲರಿಗೆ ಆದೇಶಿಸಬೇಕು ಎಂದು ಒತ್ತಾಯಿಸಿರುವುದಲ್ಲದೆ, ರಾಜ್ಯಪಾಲರ ಭವನ ಪಕ್ಷಾತೀತವಾಗಿ ಇರುವಂತೆ ನೋಡಿಕೊಳ್ಳುವ ಮೂಲಕ ಸಂವಿಧಾನದ ಆಶಯಗಳನ್ನು ರಕ್ಷಿಸುವಂತೆ ಹಾಗೂ ಸಂವಿಧಾನ ವಿರುದ್ಧವಾದ ನಡೆಗಳ ಮೂಲಕ ಪ್ರಜಾತಂತ್ರ ವ್ಯವಸ್ಥೆಯಡಿ ಸಂವಿಧಾನ ಬದ್ಧವಾಗಿ ಅಧಿಕಾರಕ್ಕೆ ಬಂದ ಸರ್ಕಾರವನ್ನು ಅಸ್ಥಿರಗೊಳಿಸದಂತೆ ಒತ್ತಾಯಿಸಲಾಗಿದೆ.ಮುಖ್ಯ ಮಂತ್ರಿಗಳ ವಿರುದ್ಧ ರಾಜ್ಯಪಾಲರು ನೀಡಿರುವ ಆದೇಶ ಜನರಿಂದ ಆಯ್ಕೆಯಾದ ಸರ್ಕಾರದ ವಿರುದ್ಧದ ದಾಳಿ ಮಾತ್ರವಲ್ಲ, ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರದ ಭಾಗವಾಗಿದೆ ಎಂದೂ ಮನವಿಯಲ್ಲಿ ಆರೋಪಿಸಲಾಗಿದ್ದು, ರಾಜ್ಯಪಾಲರು ಮುಖ್ಯ ಮಂತ್ರಿಗಳ ವಿರುದ್ಧ ನೀಡಿರುವ ಆದೇಶ ಕೇಂದ್ರ ಸರ್ಕಾರದ ಪ್ರಭಾವದಿಂದ ನಡೆದದ್ದು ಎನ್ನುವುದು ಸ್ಪಷ್ಟವಾಗಿ ಕಂಡು ಬರುತ್ತಿದೆಯೆಂದು ಟೀಕಿಸಲಾಗಿದೆ.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖರಾದ ಕೊಲ್ಯದ ಗಿರೀಶ್, ಬಿ.ಎಸ್. ತಮ್ಮಯ್ಯ, ಟಾಟು ಮೊಣ್ಣಪ್ಪ, ಪ್ರಮೋದ್ ಗಣಪತಿ, ಮುನೀರ್ ಅಹಮ್ಮದ್, ನೆರವಂಡ ಉಮೇಶ್, ತೆನ್ನಿರ ಮೈನಾ, ಪಿ.ಈ. ಸುರೇಶ್, ಕಾನೆಹಿತ್ಲು ಮೊಣ್ಣಪ್ಪ, ಹನೀಫ್, ಜಾನ್ಸನ್ ಪಿಂಟೋ, ರಾಜೇಶ್ ಯಲ್ಲಪ್ಪ, ಮೋಹನ್ ದಾಸ್, ಸೂರಜ್ ಹೊಸೂರು ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.