ಮಳವಳ್ಳಿ:

ಜನಿಸಿದ ಮಗುವಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವ ಮೂಲಕ ಮಾರಕ ರೋಗಗಳಿಂದ ರಕ್ಷಿಸಬೇಕು ಎಂದು ತಹಸೀಲ್ದಾರ್ ಎಸ್.ವಿ.ಲೋಕೇಶ್ ಕರೆ ನೀಡಿದರು.ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ‌ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಲಕಿಕೆ ಹಾಕಿಸದಿದ್ದರೆ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಪೋಲಿಯೋ ವಿರುದ್ಧ ರಕ್ಷಣೆಗಾಗಿ ಲಸಿಕೆ ಕಡ್ಡಾಯವಾಗಿದೆ. ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ಮಾತನಾಡಿ, ಜೂ.28 ರಿಂದ ಜುಲೈ 1ರವರೆಗೆ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಲಾಗುವುದು. ಯಾವುದೇ ಮಕ್ಕಳು ಲಸಿಕೆಯಿಂದ ತಪ್ಪಿಸಿಕೊಳ್ಳದಂತೆ ಜಾಗೃತಿ ವಹಿಸಲಾಗುವುದು ಎಂದರು.

ಈ ವೇಳೆ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್, ವೈದ್ಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ


ಶ್ರೀರಂಗಪಟ್ಟಣತಾಲೂಕಿನ ಬಾಬುರಾಯನಕೊಪ್ಪಲಿನ ಗ್ರಾಮದ 1ನೇ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಭಾರತ ಪಾಕಿಸ್ತಾನದ ವಿರುದ್ಧ ವಿಜಯ ಬಾರಿಸಿದ ಆಪರೇಷನ್ ಸಿಂದೂರ ಯುದ್ಧದ ಸವಿ ನೆನಪಿಗಾಗಿ ಗ್ರಾಮದಲ್ಲಿ ಹೆಣ್ಣು ಮಗುವಿಗೆ ಸಿಂದೂರಿ ಎಂದು ನಾಮಕರಣ ಮಾಡಲಾದ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಬಿ.ಶಂಕರ್ ಬಾಬು ಚಾಲನೆ ನೀಡಿ, ಎಲ್ಲಾ 5 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ ರೋಗದಿಂದ ರಕ್ಷಿಸಬೇಕು ಎಂದು ಕರೆ ನೀಡಿದರು.ಈ ವೇಳೆ ಕಿರಂಗೂರು ಗ್ರಾಪಂ ಮಾಜಿ ಸದಸ್ಯ ಬಿ.ಎಂ.ಶ್ರೀನಿವಾಸ್, ಸ್ವಾಮಿಗೌಡ, ಅಂಗನವಾಡಿ ಶಿಕ್ಷಕಿ ಆಶಾ ಮತ್ತು ಕಾರ್ಯಕರ್ತೆ ರೇಖಾ, ಲತಾ ಇತರರರಿದ್ದರು.