ಕೇಂದ್ರ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

| Published : Jul 19 2024, 12:49 AM IST

ಕೇಂದ್ರ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು, ಬ್ಯಾಂಕ್ ಮತ್ತು ವಿದ್ಯುತ್ ಖಾಸಗೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಕೇಂದ್ರ, ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ನಗರದಲ್ಲಿ ರೈತ ಸಂಘದ ಕಾರ್ಯಕರ್ತರು ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಧರಣಿ ನಡೆಸಿದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಾತ್ರಿ ಗೊಳಿಸಬೇಕು. ಕನಿಷ್ಠ ಶೇ 8.5 ಇಳುವರಿಗೆ ಕಬ್ಬಿನ ಎಫ್ಆರ್‌ಪಿ ದರ ನಿಗದಿಪಡಿಸಬೇಕು, ಬರ ಪರಿಹಾರದ ತಾರತಮ್ಯ ಸರಿಪಡಿಸಿ ಎಲ್ಲ ರೈತರಿಗೆ ಪರಿಹಾರ ಪಾವತಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು, ಬ್ಯಾಂಕ್ ಮತ್ತು ವಿದ್ಯುತ್ ಖಾಸಗೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು, ಕೃಷಿ ಪಂಪ್ ಸೆಟ್‌ಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ರೈತರಿಗೆ ಅಕ್ರಮ ಸಕ್ರಮ ಪದ್ಧತಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಸುರಕ್ಷತೆ ಹಿನ್ನೆಲೆಯಲ್ಲಿ ಜಲಾಶಯದ ವ್ಯಾಪ್ತಿಯಲ್ಲಿ ಶಾಶ್ವತವಾಗಿ ಗಣಿಗಾರಿಕೆಯನ್ನು ನಿಷೇಧ ಮಾಡಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾರ್ಥ ಸ್ಫೋಟ ಮಾಡಬಾರದು. ರೈತರ ಆತ್ಮಹತ್ಯೆ ತಡೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್ ಕೆಂಪೂಗೌಡ, ಗೋವಿಂದೇಗೌಡ, ಶಿವಳ್ಳಿ ಚಂದ್ರು, ಗೋರಾಪುರ ಶಂಕರಗೌಡ, ಜಿ.ಎಸ್ ಲಿಂಗಪ್ಪಾಜಿ, ಎಸ್.ಕೆ ರವಿ ಕುಮಾರ್, ಗೂಳೂರು ರಾಮಕೃಷ್ಣ, ಜವರೇಗೌಡ, ಎಂ.ಎಸ್ ವಿಜಯ್ ಕುಮಾರ್, ಟಿ.ಎಲ್ ವಿನೋದ್ ಬಾಬು, ವೈ.ಪಿ ಮಂಜುನಾಥ್, ಲತಾ ಶಂಕರ್ ಹಲವರು ಭಾಗವಹಿಸಿದ್ದರು.