ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕದ ಕಾರ್ಯಕರ್ತರು ಬ್ಯಾಡಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರ ಸೇರಿದಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬ್ಯಾಡಗಿ: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರ ಸೇರಿದಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬುಧವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಿಂದ ಆರಂಭವಾರ ಪ್ರತಿಭಟನಾ ಮೆರವಣಿಗೆಯ ಸ್ಟೇಷನ್ ರಸ್ತೆ ಮೂಲಕ ತಹಸೀಲ್ದಾರ ಕಚೇರಿ ತಲುಪಿತು, ಮೆರವಣಿಗೆಯುದ್ದಕ್ಕೂ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸರ್ಕಾರದಿಂದ ಸಂವಿಧಾನಕ್ಕೆ ಧಕ್ಕೆಯಿದೆ ಹೇಳಿಕೊಂಡು ತಿರುಗಾಡುತ್ತಿರುವ ರಾಜ್ಯ ಸರ್ಕಾರವೇ ಇದೀಗ ಸಂವಿಧಾನಕ್ಕೆ ಧಕ್ಕೆ ತರುವಂತಹ ಹಾಗೂ ಸಂವಿಧಾನದಲ್ಲೇ ಅವಕಾಶ ಕಲ್ಪಿಸಿರುವ ವಾಕ್ ಸ್ವಾತಂತ್ರ್ಯ ಹತ್ತಿಕ್ಕುವ ಹುನ್ನಾರ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ ಎಂದರು.

ತುರ್ತು ಪರಿಸ್ಥಿತಿ ಮುಂದುವರೆದ ಭಾಗ:ಭಾರತದಲ್ಲಿ 1975 ಜೂ. 25ರಿಂದ 1977 ಮಾ. 21ರ ವರೆಗೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ದೇಶದ ಜನರ ಮೂಲಭೂತ ಹಕ್ಕುಗಳನ್ನು ಅದರಲ್ಲೂ ವಿಶೇಷವಾಗಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಂಡಿತ್ತು, ಇದೀಗ ಜಾರಿಗೊಳಿಸಲು ಹೊರಟಿರುವ ದ್ವೇಷ ಭಾಷಣ ಮಸೂದೆ ಅದರ ಮುಂದುವರಿದ ಭಾಗವಾಗಿದೆ ಎಂದು ಆರೋಪಿಸಿದರು.

ಭಯ ಸೃಷ್ಠಿ ಮಾಡುವ ಉದ್ದೇಶ

ಈ ಮಸೂದೆ ಸರಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ಹಕ್ಕು ಕಿತ್ತುಕೊಳ್ಳು ಹುನ್ನಾರ

ತಾಲೂಕಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ದಿನದಿಂದಲೂ ಕಾಂಗ್ರೆಸ್ ಸರಕಾರ ನಡೆಸಿದ ದುರಾಡಳಿತದಿಂದ ಜನರ ನೆಮ್ಮದಿ ಹಾಳಾಗಿದೆ. ಬೆಲೆ ಏರಿಕೆ ಹಾಗೂ ತೆರಿಗೆ ಹೆಸರಲ್ಲಿ ಜನರ ಹಣವನ್ನು ಲೂಟಿ ಮಾಡಲಾಗುತ್ತಿದೆ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡುವ ಜನರ ಧ್ವನಿಯನ್ನ ಹತ್ತಿಕ್ಕುವ ಮಸೂದೆ ಜಾರಿಗೆ ತಂದು ಪ್ರಜಾಪ್ರಭುತ್ವದಡಿ ಸಿಕ್ಕಿರುವ ಹಕ್ಕನ್ನು ಕಿತ್ತುಕೊಳ್ಳಲು ಮುಂದಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಶಿವಬಸಪ್ಪ ಕುಳೇನೂರ, ಚಂದ್ರಣ್ಣ ಶೆಟ್ಟರ, ಶಂಕರಗೌಡ ಪಾಟೀಲ, ಮುರಿಗೆಪ್ಪ ಶೆಟ್ಟರ, ವಿನಾಯಕ ಕಂಬಳಿ, ವಿನಯ ಹಿರೇಮಠ, ಕಲಾವತಿ ಬಡಿಗೇರ, ಸರೋಜಾ ಉಳ್ಳಾಗಡ್ಡಿ, ಶಿವರಾಜ ಅಂಗಡಿ, ಹಾಲೇಶ ಜಾಧವ, ವಿಷ್ಣುಕಾಂತ ಬೆನ್ನೂರ, ದ್ಯಾಮನಗೌಡ ಪೂಜಾರ, ಶಂಕ್ರಪ್ಪ ಅಕ್ಕಿ, ಸಿದ್ದಲಿಂಗಪ್ಪ ಪಟ್ಟಣಶೆಟ್ಟಿ, ಹನುಮಂತಪ್ಪ ಕುರುಡಣ್ಣನವರ, ಶಿವರಾಯಪ್ಪ ಅಪ್ಪಣ್ಣನವರ, ಪ್ರವೀಣ ಪಾಟೀಲ, ಪ್ರದೀಪ ಜಾಧವ, ವರುಣ ಮಲ್ಲಿಗಾರ, ಕೊಟ್ರಯ್ಯ ಸೊಪ್ಪಿನಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಧಾನಸೌಧದಲ್ಲೇ ದೇಶ ವಿರೋಧಿ ಘೋಷಣೆ:

ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ. ಇದೀಗ ಸರ್ಕಾರದ ವೈಫ್ಯಲ್ಯಗಳನ್ನು ಬಯಲಿಗೆಳೆಯಲಿರುವ ಜನರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು .ಪುರಸಭೆ ಮಾಜಿ ಸದಸ್ಯ ಸುರೇಶ ಉದ್ಯೋಗಣ್ಣನವರ ಅಸಮಾಧಾನ ವ್ಯಕ್ತಪಡಿಸಿದರು.