ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನೆರೆದಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿ
ಕನ್ನಡಪ್ರಭ ವಾರ್ತೆ ಮೈಸೂರು
ನಗರದಲ್ಲಿ ಅಕ್ರಮ ಕಸಾಯಿಖಾನೆ, ಗೋ ರಫ್ತು ಮತ್ತು ಗೋಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.ಸಾಮಾಜಿಕ ಜಾಣತಾಲದಲ್ಲಿ ವಾಹಿದ್ ಎಂಬಾತ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಗೆ ತಾಕತ್ತಿದ್ದರೆ ಮೈಸೂರಿಗೆ ಬಾ, ನಿನ್ನ ಮುಂದೆಯೇ ಗೋ ಹತ್ಯೆ ಮಾಡುತ್ತೇನೆ ಎಂದು ಹಾಕಿದ್ದ ಸವಾಲು ಸ್ವೀಕರಿಸಿ ಮೈಸೂರಿಗೆ ಬಂದ ಪುನೀತ್ ಕೆರೆಹಳ್ಳಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನೆರೆದಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಪ್ರತಿಭಟಿಸಿ ಗೋ ಹತ್ಯೆ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುವ ಸೂಚನೆ ಸಿಗುತ್ತಿದ್ದಂತೆ, ಸಾರ್ವಜನಿಕ ಶಾಂತಿಗೆ ಧಕ್ಕೆಯಾಗದಂತೆ ತಡೆಯಲು ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪುನೀತ್ ಕೆರೆಹಳ್ಳಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿ, ಸಿಎಆರ್ ಮೈದಾನಕ್ಕೆ ಕರೆದುಕೊಂಡು ಹೋಗಿ ನಂತರ ಬಿಡುಗಡೆಗೊಳಿಸಿದರು.ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಾನೂನಿನ ಭಯವಿಲ್ಲದೆ ಸಮಾಜಘಾತಕ ಶಕ್ತಿಗಳು ವರ್ತಿಸುತ್ತಿದ್ದು, ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ. ಮಂಡಿ ಮೊಹಲ್ಲಾ, ಉದಯಗಿರಿ, ಎನ್.ಆರ್. ಮೊಹಲ್ಲಾ ಹಾಗೂ ಶಾಂತಿನಗರ ವ್ಯಾಪ್ತಿಗಳಲ್ಲಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸಿ ತಂದು ಅಕ್ರಮ ಕಸಾಯಿಖಾನೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕವಾಗಿ ಮಾಂಸ ಪ್ರದರ್ಶಿಸಿ ಕೋಮು ಉದ್ವಿಗ್ನತೆ ಸೃಷ್ಟಿಸಲು ಯತ್ನಿಸಲಾಗುತ್ತಿದ್ದು, ಮಾಹಿತಿ ನೀಡುವ ಗೋರಕ್ಷಕರಿಗೆ ಬಹಿರಂಗವಾಗಿಯೇ ಬೆದರಿಕೆ ಕರೆ ಹಾಕಲಾಗುತ್ತಿದೆ ಎಂದು ಅವರು ದೂರಿದರು.
ಅಕ್ರಮ ಕಸಾಯಿಖಾನೆಗಳ ಮೇಲೆ ತಕ್ಷಣವೇ ದಾಳಿ ನಡೆಸಿ ಜಾಗಗಳನ್ನು ಜಪ್ತಿ ಮಾಡಬೇಕು. ಬೆದರಿಕೆ ಒಡ್ಡುತ್ತಿರುವ ಕಿಡಿಗೇಡಿಗಳ ವಿರುದ್ಧ ಜಾಮೀನು ರಹಿತ ಸೆಕ್ಷನ್ ಗಳು ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು. ನಗರದ ಪ್ರವೇಶ ದ್ವಾರಗಳಲ್ಲಿ ಕಟ್ಟುನಿಟ್ಟಿನ ನಾಕಾಬಂದಿ ಹಾಕಿ ಅಕ್ರಮ ಜಾನುವಾರು ಸಾಗಣೆ ವಾಹನಗಳನ್ನು ಜಪ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.ಈ ವೇಳೆ ಪುನೀತ್ ಕೆರೆಹಳ್ಳಿ ಮಾತನಾಡಿ, ಉದಯಗಿರಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅತ್ಯಧಿಕ ಪ್ರಮಾಣದಲ್ಲಿ ಗೋ ರಫ್ತು ಮತ್ತು ಗೋ ಹತ್ಯೆ ನಡೆಯುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ತಡೆಗೆ ಸ್ಪಷ್ಟ ಕಾನೂನು ಮತ್ತು ಆದೇಶಗಳಿದ್ದರೂ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಇದನ್ನು ತಡೆಯಲು ಯಾಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ? ಪೊಲೀಸ್ ಇಲಾಖೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾದರೆ, ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.