ಸಾರಾಂಶ
ಹಾವೇರಿ: ನೀಟ್ ಪರೀಕ್ಷೆ ಅಕ್ರಮ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜಾರಿಗೊಳಿಸಲು ಒತ್ತಾಯಿಸಿ ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ಬುಧವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಮೈಲಾರ ಮಹಾದೇವಪ್ಪ ವೃತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜೆ.ಪಿ. ವೃತ್ತದ ಮೂಲಕ ಹೊಸಮನಿ ಸಿದ್ದಪ್ಪ ವೃತಕ್ಕೆ ಆಗಮಿಸಿತು. ನಂತರ ಪ್ರತಿಭಟನಾನಿರತ ವಿದ್ಯಾರ್ಥಿಗಳು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ದೇಶದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇತರೆ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆಯ ಫಲಿತಾಂಶಗಳು ಜೂ. ೪ರಂದು ಪ್ರಕಟವಾದ ನಂತರ, ನ್ಯಾಶನಲ್ ಟೆಸ್ಟ್ ಏಜೆನ್ಸಿ (ಎನ್.ಟಿ.ಎ) ಪರೀಕ್ಷೆಯ ಫಲಿತಾಂಶದಲ್ಲಿನ ನಡವಳಿಕೆಯ ಬಗ್ಗೆ ಹಾಗೂ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಪಾರದರ್ಶಕತೆಯನ್ನು ಪ್ರಶ್ನಿಸುವ ಹಲವಾರು ದೂರುಗಳು ದೇಶಾದ್ಯಂತ ಬರುತ್ತಿವೆ. ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣದ ಪಠ್ಯಕ್ರಮದಲ್ಲಿ ಗಮನಾರ್ಹವಾದ ಕಡಿತ ಮಾಡುತ್ತಾ ಕಾಲೇಜು ಶುಲ್ಕಗಳನ್ನು ಹೆಚ್ಚಿಸುತ್ತಾ ಹಣವುಳ್ಳವರಿಗೆ ಮಾತ್ರ ವೈದ್ಯಕೀಯ ಶಿಕ್ಷಣ ಎಂಬ ಖಾಸಗೀಕರಣ ನೀತಿಗಳನ್ನು ಎನ್ಎಂಸಿ ಮತ್ತು ಎನ್ಟಿಎ ಸಂಸ್ಥೆಗಳು ಜಂಟಿಯಾಗಿ ಪ್ರೋತ್ಸಾಹಿಸುತ್ತಿವೆ. ಇದು ದೇಶದ ಭವಿಷ್ಯಕ್ಕೆ ಅಪಾಯಕಾರಿಯಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ರಾಜ್ಯ ಆಧಾರಿತ ಪ್ರವೇಶ ಪರೀಕ್ಷೆ ಪದ್ಧತಿಯನ್ನು ಬದಲಾಯಿಸಲು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಈಗ ನೀಟ್-ಯುಜಿಸಿಗೆ ಸಂಬಂಧಿಸಿದಂತೆಯೂ ಇದೇ ಆರೋಪ ಸಾಬೀತಾಗಿದೆ ಎಂದರು.ಎನ್ಟಿಎ ಪ್ರಾರಂಭವಾದಾಗಿನಿಂದ ಪ್ರಮುಖ ಪರೀಕ್ಷೆಗಳ ಗಂಭೀರ ಅವ್ಯವಹಾರಗಳು ನಡೆಯುತ್ತಿದೆ. ಇಂತಹ ಸಂಸ್ಥೆಯು ಪರೀಕ್ಷೆಯನ್ನು ನಡೆಸಲು ಅಸಮರ್ಥವಾಗಿದೆ ಎಂದು ಮತ್ತೊಮ್ಮೆ ಸಾಬೀತಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇದರಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ಮತ್ತು ನಿಸ್ಪಕ್ಷ್ಷಪಾತ ತನಿಖೆಗೆ ಈ ಪ್ರಕರಣವನ್ನು ಸುಪ್ರೀಂ ಕೋರ್ಟಿನ ನ್ಯಾಯಾಧೀಶರ ಸಮಿತಿ ರಚನೆ ಮಾಡಬೇಕು ಎಂದು ಆಗ್ರಹಿಸಿದರು. ಹಲವಾರು ಪರೀಕ್ಷೆಗಳನ್ನು ನಡೆಸಲು ಎನ್ಟಿಎ ವಿಫಲವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಆದರಿಂದ ಎನ್ಟಿಎ ರದ್ದು ಪಡಿಸಬೇಕೆಂದು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮದ ನೇರ ಹೊಣೆಯನ್ನು ಭಾರತ ಸರ್ಕಾರದ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ನೈತಿಕ ಹೊಣೆ ಒತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಎಸ್ಎಫ್ಐ ಮುಖಂಡ ಸುಲೆಮಾನ್ ಮತ್ತಿಹಳ್ಳಿ ಮಾತನಾಡಿ, ಪ್ರತಿ ವರ್ಷ ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದ ಸುಮಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಒಬ್ಬ ವಿದ್ಯಾರ್ಥಿಗೆ ನೀಟ್ ಪರೀಕ್ಷೆಯ ಕೋಚಿಂಗ್ಗೆ ಲಕ್ಷಾಂತರ ರು., ಹಣ ವಸೂಲಿ ಮಾಡಲಾಗುತ್ತಿದೆ. ಹೀಗಾಗಿ ಬಡಕುಟುಂಬದ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆಯಲು ವಂಚಿತರಾಗುತ್ತಿದ್ದಾರೆ. ನೀಟ್ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕೂಡಲೇ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಮಾಡಬೇಕು, ಎನ್ಟಿಎ ರದ್ದುಪಡಿಸಲು ಮತ್ತು ಇಲ್ಲಿಯವರೆಗಿನ ಅದರ ಎಲ್ಲ ಹಗರಣಗಳನ್ನು ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಕುಬೇರ್ ಗೋಣಿ, ಅಜೇಯ ಲಮಾಣಿ, ಸುನೀಲ್ ಎಲ್, ಭರತ್ ಡಿ.ಆರ್., ಹೇಮಂತ್ ಡಿ.ಎಲ್., ನಾಗರಾಜ ಕೆ ಎಚ್., ಅನ್ನಪೂರ್ಣ, ಶಿಲ್ಪಾ ಕೆ., ಭೂಮಿಕಾ ವಿ.ಎಚ್, ಲಕ್ಷ್ಮಿ ಡಿ.ಆರ್. ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
;Resize=(128,128))
;Resize=(128,128))