ಕಳಪೆ ಗುಣಮಟ್ಟದ ಬಿತ್ತನೆ ಬೀಜ ಪ್ರತಿಭಟನೆ

| Published : Jun 29 2025, 01:33 AM IST

ಕಳಪೆ ಗುಣಮಟ್ಟದ ಬಿತ್ತನೆ ಬೀಜ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಳಪೆ ಗುಣಮಟ್ಟದ ಬಿತ್ತನೆ ಬೀಜ, ರಸಾಯನಿಕ ಗೊಬ್ಬರ, ಕೀಟನಾಶಕಗಳ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಕೃಷಿ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಕೃಷಿ ಇಲಾಖೆ ಕಚೇರಿಗೆ ತರೆಳಿದ ಪ್ರತಿಭಟನಾಕಾರರು, ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ನಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಕಳಪೆ ಗುಣಮಟ್ಟದ ಬಿತ್ತನೆ ಬೀಜ, ರಸಾಯನಿಕ ಗೊಬ್ಬರ, ಕೀಟನಾಶಕಗಳ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಕೃಷಿ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಕೃಷಿ ಇಲಾಖೆ ಕಚೇರಿಗೆ ತರೆಳಿದ ಪ್ರತಿಭಟನಾಕಾರರು, ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ತಾಲೂಕು ಘಟಕದ ಕಾರ್ಯಾಧ್ಯಕ್ಷ ಭುವನೇಶ್, ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ ರೈತರು ಬಿತ್ತನೆ ಮಾಡಿರುವ ಮುಸುಕಿನ ಜೋಳದ ಬೆಳೆ ರೋಗ ಬಾಧೆಗೆ ತುತ್ತಾಗಿ ರೈತರು ತೀವ್ರ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳು ಕಾರಣವಾಗಿದ್ದು ಇದನ್ನು ತಡೆಗಟ್ಟುವಲ್ಲಿ ಜಿಲ್ಲಾ ಕೃಷಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ಕೂಡಲೇ ಕಳಪೆ ವಸ್ತುಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ನಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಈ ಪ್ರತಿಭಟನೆ ಕೇವಲ ಸಾಂಕೇತಿಕವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಬಳಿಕ ಉಪಕೃಷಿ ನಿರ್ದೇಶಕಿ ಕೋಕಿಲಾ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಉಪಕೃಷಿ ನಿರ್ದೇಶಕಿ ಕೋಕಿಲಾ ಮಾತನಾಡಿ, ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಶೇ. 163ರಷ್ಟು ಹೆಚ್ಚಿನ ಮಳೆ ಬಿದ್ದಿದೆ. ಮುಸುಕಿನ ಜೋಳದ ಬಿತ್ತನೆ 19700 ಹೆಕ್ಟೇರ್‌ ಗುರಿ ಇದ್ದು ಈಗಾಗಲೇ 17800 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಸುಕಿನ ಜೋಳದ ಬೆಳೆಯಲ್ಲಿ ರೋಗ ಕಾಣಿಸಿಕೊಳ್ಳಲು ಶಿಲೀಂದ್ರ ಕಾರಣವಾಗಿದ್ದು, ಇದು ತಂಪಾದ ವಾತಾವರಣದಲ್ಲಿ ವೇಗವಾಗಿ ಹಬ್ಬುತ್ತದೆ. ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗ ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿರುವುದಲ್ಲದೆ ಈ ಕುರಿತು ವ್ಯಾಪಕ ಪ್ರಚಾರ ನಡೆಸಿ ತಿಳಿವಳಿಕೆ ನೀಡಲಾಗಿದೆ. ಅಗತ್ಯ ಕೀಟನಾಶಕಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಕಿ ದಾಸ್ತಾನು ಮಾಡಿ ವಿತರಣೆಗೆ ಕ್ರಮ ವಹಿಸಲಾಗಿದೆ. ವಿಜ್ಞಾನಿಗಳ ತಂಡವೂ ಭೇಟಿ ನೀಡಿ ಮಾಹತಿ ಕಲೆ ಹಾಕಿದ್ದು 10 ದಿನದಲ್ಲಿ ವರದಿ ನೀಡುವುದಾಗಿ ತಿಳಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಸಹಾಯಕ ಕೃಷಿ ನಿರ್ದೇಶಕಿ ಕವಿತಾ ಇದ್ದರು. ತಾಲೂಕು ರೈತ ಸಂಘದ ಅಧ್ಯಕ್ಷ ಹೊಂಬೇಗೌಡ, ಮುಖಂಡರಾದ ದುಬಾಸಿಗೌಡ, ರಮೇಶ್, ರಾಜೇಗೌಡ, ಪುಟ್ಟರಾಜ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು./