ಸಾರಾಂಶ
ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ರಾಜ್ಯ ವಿದ್ಯುತ್ ಬಳಕೆದಾರರ ಸಂಘವು ತೀವ್ರವಾಗಿ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಿಪೇಯ್ಡ್ ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಸುವುದನ್ನು ನಿಲ್ಲಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘ(ಕೆಇಸಿಎ)ದಿಂದ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ವಿ.ಭಟ್ ಮಾತನಾಡಿ, ಕೇಂದ್ರ ಸರ್ಕಾರವು ಖಾಸಗೀಕರಣ ಮಾಡುವ ಉದ್ದೇಶದಿಂದ ವಿದ್ಯುತ್ ತಿದ್ದುಪಡಿ ಮಸೂದೆ-2022 ಜಾರಿಗೆ ತಂದಿದ್ದು ತಕ್ಷಣ ಇದನ್ನು ಹಿಂಪಡೆಯಬೇಕು. ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ತಕ್ಷಣ ನಿಲ್ಲಿಸಬೇಕು. ಸಾಮಾನ್ಯ ಗ್ರಾಹಕರು ಮತ್ತು ರೈತರಿಗೆ ಕೈಗೆಟುಕುವ ದರದಲ್ಲಿ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು.
ಕೇಂದ್ರವು ವಿದ್ಯುತ್ ವಲಯ ಖಾಸಗೀಕರಣ ಮಾಡುವ ಉದ್ದೇಶದಿಂದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ಜಾರಿಗೆ ತಂದಿದೆ. ಇದು ರೈತರು, ವ್ಯಾಪಾರಿಗಳು ಸೇರಿದಂತೆ ಗ್ರಾಹಕರಿಗೆ ಸಂಕಷ್ಟ ತರಲಿದೆ. ಆದ್ದರಿಂದ ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘವು ‘ಅಖಿಲ ಭಾರತ ಪ್ರತಿಭಟನಾ ದಿನ’ಕ್ಕೆ ಕರೆ ನೀಡಿದ್ದರಿಂದ ರಾಜ್ಯಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ವೇಣುಗೋಪಾಲ್, ರಾಜ್ಯ ಘಟಕದ ಕಾರ್ಯದರ್ಶಿ ವಿ.ಜ್ಞಾನಮೂರ್ತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.