ಸಾರಾಂಶ
ಶ್ರೀರಂಗಪಟ್ಟಣ: ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲಿನ ಶೂ ಎಸೆತ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಘನತೆಗೆ ಧಕ್ಕೆ ತರುವ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹಾಗೂ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಸೇರಿದ ದಸಂಸ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆರೋಪಿ ರಾಕೇಶ್ ಕಿಶೋರ್ ವಿರುದ್ಧ ಘೋಷಣೆ ಕೂಗಿದರು. ಮುಖ್ಯ ನ್ಯಾಯಮೂರ್ತಿ ಬಿ. ಆರ್.ಗವಾಯಿ ಅವರ ಮೇಲೆ ಶೂ ಎಸೆಯುವ ಮೂಲಕ ನ್ಯಾಯಾಂಗದ ಸಾರ್ವಭೌಮತ್ವ, ಭಾರತದ ಸಂವಿಧಾನ ಮತ್ತು ದೇಶದ ಕಾನೂನು ವ್ಯವಸ್ಥೆ ಮೇಲೆ ನೇರ ದಾಳಿ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇಂತಹ ಪ್ರಕರಣ ಆಗದಂತೆ ಪೊಲೀಸರು ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ಶಂಭೂಗೌಡ, ಬಾಲಕೃಷ್ಣ, ಕೃಷ್ಣೇಗೌಡ ಮರಳಗಾಲ, ಚಂದ್ರು, ಪಾಂಡು, ದಸಂಸ ಸದಸ್ಯರಾದ ರವಿಚಂದ್ರ, ಮುಂಡುಗದೊರೆ ಮೋಹನ್, ಚಂದ್ರಶೇಖರ್, ಹೊನ್ನಯ್ಯ, ನಗುವನಹಳ್ಳಿ ಮಹದೇವಸ್ವಾಮಿ, ಏಜಾಜ್ಪಾಷ ಮುಖಂಡರು ಭಾಗವಹಿಸಿದ್ದರು.