ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಪ್ರತಿಭಟನೆ

| Published : Apr 20 2024, 01:10 AM IST

ಸಾರಾಂಶ

ವಿದ್ಯಾರ್ಥಿನಿ ನೇಹಾ ಹಿರೇಮಠ ಅಮಾನುಷ ಕೊಲೆಗೈದ ಕ್ರೂರಿ ಫಯಾಜ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಹಿಂದು ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಸಮಾಜದ ಮುಖಂಡರು ಸವದತ್ತಿ ಮತ್ತು ಮುನವಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ವಿದ್ಯಾರ್ಥಿನಿ ನೇಹಾ ಹಿರೇಮಠ ಅಮಾನುಷ ಕೊಲೆಗೈದ ಕ್ರೂರಿ ಫಯಾಜ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಹಿಂದು ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಸಮಾಜದ ಮುಖಂಡರು ಸವದತ್ತಿ ಮತ್ತು ಮುನವಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಮುನವಳ್ಳಿ ಮತ್ತು ಸವದತ್ತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಹಿಂದು ಹೆಣ್ಣು ಮಗಳ ಮೇಲಿನ ಕೃತ್ಯ ಅತ್ಯಂತ ಕ್ರೂರವಾಗಿದೆ. ಸರ್ಕಾರದ ನಿರ್ಲಕ್ಷದಿಂದ ರಾಜ್ಯದಲ್ಲಿ ಜನರಿಗೆ ಸುರಕ್ಷತೆ ಇಲ್ಲದಾಗಿದೆ. ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿದ ವ್ಯಕ್ತಿಯನ್ನು ಎನ್‌ಕೌಂಟರ್ ಮಾಡುವ ಮೂಲಕ ಕೊಲೆಗಡುಕರಿಗೆ ಎಚ್ಚರಿಕೆ ನೀಡಬೇಕಾಗಿದೆ. ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಹೆತ್ತವರು ತೀವ್ರ ದುಃಖದಲ್ಲಿದ್ದು, ಈ ಕೊಲೆಗಡುಕ ರಾಕ್ಷಸನಿಗೆ ಕಠಿಣ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ ಮಾತನಾಡಿ, ಹಿಂದು ಸಮಾಜದ ಮಗಳನ್ನು ಫಯಾಜ್ ಎಂಬ ದುಷ್ಟ ಭೀಕರವಾಗಿ ಕೊಲೆ ಮಾಡಿದ್ದು, ಕೊಲೆಗಾರನಿಗೆ ಗಲ್ಲುಶಿಕ್ಷೆ ವಿಧಿಸುವ ಮೂಲಕ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ನೀಡಬೇಕೆಂದು ಆಗ್ರಹಿಸಿದರು.

ಪಂಚನಗೌಡ ದ್ಯಾಮನಗೌಡರ ಮತ್ತು ಸೌರವ್ ಚೋಪ್ರಾ ಮಾತನಾಡಿ, ಲವ್ ಜಿಹಾದ್ ಕಾರಣಕ್ಕಾಗಿ ಅಮಾಯಕ ಮುಗ್ಧ ವಿದ್ಯಾರ್ಥಿನಿಯ ಕೊಲೆ ಮಾಡಿದಂತ ವಿಷ ಜಂತುಗಳನ್ನು ಹೊಸಕಿ ಹಾಕುವ ಕಾರ್ಯವನ್ನು ಸರ್ಕಾರ ಮಾಡಬೇಕಿದೆ. ಈ ಘಟನೆ ಹಿನ್ನೆಲೆಯಲ್ಲಿ ಮುನವಳ್ಳಿಯಲ್ಲಿ ಮೂರು ದಿನಗಳ ಕಾಲ ಎಲ್ಲ ಅಂಗಡಿ ಮುಂಗಟ್ಟು ಬಂದ್ ಮಾಡಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಲಾಗುತ್ತಿದೆ ಎಂದರು.

ಶಾಸಕ ವಿಶ್ವಾಸ ವೈದ್ಯ ಮುನವಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸುವುದರ ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆಯನ್ನು ನೀಡಲು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಎಫ್.ಎಸ್.ಸಿದ್ದನಗೌಡರ ಮಾತನಾಡಿ, ಲವ್ ಜಿಹಾದ್‌ನಿಂದಾಗಿ ಇಂದು ರಾಜ್ಯದಲ್ಲಿ ಅನೇಕ ಹಿಂದು ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದು, ಸರ್ಕಾರ ಹಿಂದು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಮಾತನಾಡಿ, ಪಟ್ಟಣದ ಜನರು ಬಹಳ ತಿಳಿವಳಿಕೆಯುಳ್ಳವರಾಗಿದ್ದು, ಅವರ ಆಕ್ರೋಶ ಆರೋಪಿತನ ಮೇಲೆ ಮಾತ್ರ ಇದೆ. ಕುಟುಂಬದವರಿಗೇನೂ ಸಮಸ್ಯೆಯಿಲ್ಲ. ಕುಟುಂಬಕ್ಕೆ ರಕ್ಷಣೆ ನೀಡುವ ಪ್ರಸಂಗ ಉದ್ಭವಿಸಲ್ಲ. ಮುನ್ನೆಚ್ಚರಿಕೆಯಾಗಿ ಕೆಲವೊಂದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬೃಹತ್ ಪ್ರತಿಭಟನೆ, ರಸ್ತೆ ತಡೆ: ಮುನವಳ್ಳಿಯ ಪಂಚಲಿಂಗೇಶ್ವರ ವೃತ್ತದಲ್ಲಿ ಬೆಳಗ್ಗೆಯಿಂದ ವಿವಿಧ ಸಂಘಟನೆಗಳ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಸವದತ್ತಿಯ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಪಟ್ಟಣದ ವಿವಿಧ ಬೀದಿಗಳ ಮೂಲಕ ಸಂಚರಿಸಿ ಮಿನಿವಿಧಾನಸೌಧ ತಲುಪಿ ಆರೋಪಿತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.