ಮಡಿಕೇರಿ: ನಾಲ್ಕು ಕಾರ್ಮಿಕ ಕೋಡ್ಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ವಿ.ಬಿ. ಜಿ ರಾಮ್ ಜಿ, ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಟ್ರೇಡ್ ಯೂನಿಯನ್ ಜಂಟಿ ಸಮಿತಿ (ಜೆಸಿಟಿಯು), ಸಂಯುಕ್ತ ಹೋರಾಟ ಕರ್ನಾಟಕ (ಎಸ್ಎಚ್ಕೆ) ವತಿಯಿಂದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮುಷ್ಕರ ನಡೆಸಿದ ಪ್ರತಿಭಟನಾಕಾರರು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.ಈ ಸಂದರ್ಭ ಸಿಐಟಿಯು ಪ್ರಧಾನ ಕಾರ್ಯದರ್ಶಿ ಪಿ.ಆರ್. ಭರತ್ ಮಾತನಾಡಿ, ಕೇಂದ್ರ ಸರ್ಕಾರವು ಸರ್ವಾಧಿಕಾರಿ ವರ್ತನೆ ತೋರುತ್ತಿರುವ ಜತೆಗೆ ನಾಲ್ಕು ಕಾರ್ಮಿಕ ಕಾಯ್ದೆಗಳ ಮೂಲಕ ಹೊಸ ಶ್ರಮಿಕ ನೀತಿ ಜಾರಿ ಮಾಡಲು ಯತ್ನಿಸುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಇಎಸ್ಐ, ಇಪಿಎಫ್ ಇಲ್ಲ. ೧೮ ರೂ. ಸಾವಿರಕ್ಕಿಂತ ಕಡಿಮೆ ವೇತನವಿದ್ದರೆ ಅವರಿಗೆ ಯಾವುದೇ ಸೌಲಭ್ಯ ದೊರೆಯುವುದಿಲ್ಲ. ಕಾಯಂ ನೌಕರರ ಪರಿಕಲ್ಪನೆಯನ್ನು ತೆಗೆದು ಹಾಕಲಾಗಿದೆ ಎಂದು ದೂರಿದರು.ಈ ಹಿಂದೆ ಕಾರ್ಮಿಕರ ಪರವಾಗಿದ್ದ ೪೨ ಕಾನೂನುಗಳು ಇತ್ತು. ಆದರೆ, ೨೧ ಕಾನೂನುಗಳನ್ನು ಕೇಂದ್ರ ಸರ್ಕಾರ ೪ ಲೇಬರ್ ಕೋಡ್ಗಳನ್ನಾಗಿ ಮಾಡಿ ಶ್ರೀಮಂತರ ಪರವಾಗಿ ಇರುವಂತೆ ಮಾಡಿದ್ದಾರೆ. ಜತೆಗೆ ಶ್ರೀಮಂತರ ಆಸ್ತಿಯನ್ನು ಹೆಚ್ಚಿಸಲು ದುಡಿಯುವ ವರ್ಗದವರ ರಕ್ತವನ್ನು ಹೀರುತ್ತಿದ್ದಾರೆ. ಈ ಹಿನ್ನೆಲಯಲ್ಲಿ ೪ ಲೇಬರ್ ಕೋಡ್ಗಳನ್ನು ಹಿಂಪಡೆಯಬೇಕು. ವಿದ್ಯುಚ್ಛಕ್ತಿ ತಿದ್ದುಪಡಿ, ಬೀಜ ಮಸೂದೆ, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರು ವಿವಿದ ಬೇಡಿಕೆ ಈಡೇರಿಕೆ ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ. ಸಾಬು, ಎಐಟಿಯುಸಿ ಜಿಲ್ಲಾಧ್ಯಕ್ಷ ಸೋಮಪ್ಪ, ಉಪಾಧ್ಯಕ್ಷ ಮಣಿ, ರೈತ ಮುಖಂಡ ನೆರವಂಡ ಉಮೇಶ್, ವಿವಿಧ ಸಂಘಟನೆಗಳ ಪ್ರಮುಖರಾದ ಅಣ್ಣಯ್ಯ, ಪುಷ್ಪಾ, ಮಹದೇವ್, ಸುಮಿತ್ರಾ, ಜಮುನಾ, ಕುಸುಮ, ಲಕ್ಷ್ಮಣ್, ಉದಯ್ ಕುಮಾರ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.