ಹೊಸಪೇಟೆ: ಕೇಂದ್ರ ಸರ್ಕಾರದ ನಿರಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಇಲ್ಲಿನ ಡಾ.ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಸಿಪಿಎಂ ಪಕ್ಷದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ನಗರದ ಶ್ರಮಿಕ ಭವನದಿಂದ ಪ್ರತಿಭಟನೆ ಮೆರವಣಿಗೆ ನಡೆಸಿದ ಸಿಪಿಎಂ ಕಾರ್ಯಕರ್ತರು, ಪ್ರಮುಖ ಬೀದಿಗಳ ಮೂಲಕ ತಹಶೀಲ್ದಾರ ಕಚೇರಿಗೆ ಆಗಮಿಸಿ, ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರವು ಪದೇಪದೇ ಇಂಧನ ಬೆಲೆಗಳನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ನಿತ್ಯೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಬಡವರು, ಮಧ್ಯಮ ವರ್ಗದವರು ಜೀವನ ನಡೆಸಲು ತತ್ತರಿಸುವಂತಾಗಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಬಡ ಜನರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬೆಲೆ ಏರಿಕೆಯ ಮೂಲಕ ಗಾಯದ ಮೇಲೆ ಬರೆ ಎಳೆದಂತೆ ಮಾಡುತ್ತಿದೆ ಎಂದು ಪ್ರತಿಭಟನೆಕಾರರು ಕಿಡಿಕಾರಿದರು.
ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ಈ ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಮುಖಂಡರಾದ ಎನ್.ಯಲ್ಲಾಲಿಂಗ, ಆರ್.ಭಾಸ್ಕರ್ ರೆಡ್ಡಿ, ಎಂ.ಜಂಬಯ್ಯ ನಾಯಕ, ಎಂ.ಗೋಪಾಲ, ಕೆ.ಎಂ. ಸ್ವಪ್ನ, ಕೆ. ನಾಗರತ್ನಮ್ಮ, ವಿ.ಸ್ವಾಮಿ , ಈ.ಮಂಜುನಾಥ, ರಮೇಶ್ ಕುಮಾರ್, ಶಕುಂತಲಮ್ಮ, ಎಸ್.ಯಲ್ಲಮ್ಮ ಹಾಗೂ ಹೇಮಂತ್ ನಾಯ್ಕ್ ಇದ್ದರು.
ಹೊಸಪೇಟೆ ನಗರದಲ್ಲಿ ಸಿಪಿಐಎಂ ಪದಾಧಿಕಾರಿಗಳು ಕೇಂದ್ರ ಸರ್ಕಾರದ ನಿರಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.