ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

| Published : Jun 21 2024, 01:00 AM IST

ಸಾರಾಂಶ

ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಆದೇಶ ಹಿಂಪಡೆಯುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹ

ಕನ್ನಡಪ್ರಭ ವಾರ್ತೆ ಬೆಳಗಾವಿ

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಸಂಸದ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ನಗರದ ಬೋಗಾರವೇಸ್‌ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ. ಕೂಡಲೇ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಹೆಚ್ಚಳ ಮಾಡಿರುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಅನಿಲ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಜಗದೀಶ ಶೆಟ್ಟರ್‌, ಗ್ಯಾರಂಟಿ ಯೋಜನೆಗಲನ್ನು ಸರಿದೂಗಿಸಲು ರಾಜ್ಯ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಮಾಡುತ್ತಿದೆ. ಇದು ಸರಿಯಾದ ಕ್ರಮವಲ್ಲ. ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಎಲ್ಲದರ ಮೇಲೂ ಪರಿಣಾಮ ಬೀರುತ್ತದೆ ಎಂದರು.

ಸಾರಿಗೆ ವೆಚ್ಚ ಹೆಚ್ಚಳಕ್ಕೆ ಚಿಂತನೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಆಡಳಿತದ ಬಿಗಿ ಹಿಡಿತ ತಪ್ಪಿದೆ. ಪಕ್ಕದ ರಾಜ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವೇ ಇದೆ. ಅಲ್ಲಿ ಪೆಟ್ರೋಲ್ ಡಿಸೇಲ್ ದರ ಇಲ್ಲಿಗಿಂತ ₹ 9 ಕಡಿಮೆ ಇದೆ. ಇದಕ್ಕೆ ಸಿದ್ದರಾಮಯ್ಯನವರ ಬಳಿ ಉತ್ತರವಿದೆಯಾ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಇದೀ ರೀತಿ ಸರ್ಕಾರ ನಡೆಯನ್ನು ಅನುಸರಿಸಿದರೆ ಜನ ದಂಗ ಏಳುವ ಪರಿಸ್ಥಿತಿ ನಿರ್ಮಾಣ ಆಗಲಿದೆ ಎಂದು ಗುಡುಗಿದರು.