ಬಸ್ ವ್ಯವಸ್ಥೆ ಕಲ್ಪಿಸುವಂತೆ ರಸ್ತೆ ತಡೆದು ಪ್ರತಿಭಟನೆ

| Published : Oct 29 2025, 01:45 AM IST

ಸಾರಾಂಶ

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ತಾಲೂಕಿನ ಪಾಳಾ ಕ್ರಾಸ್‌ನಲ್ಲಿ ಶಾಲಾ-ಕಾಲೇಜು ವಿದ್ಯಾಥಿಗಳು ಬಸ್ ತಡೆದು ಕೆಲ ಕಾಲ ರಸ್ತೆ ತಡೆ ನಡೆಸಿ ಮಂಗಳವಾರ ಪ್ರತಿಭಟಿಸಿದರು.

ಕನ್ನಡಪ್ರಭ ವಾರ್ತೆ ಮುಂಡಗೋಡ

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ತಾಲೂಕಿನ ಪಾಳಾ ಕ್ರಾಸ್‌ನಲ್ಲಿ ಶಾಲಾ-ಕಾಲೇಜು ವಿದ್ಯಾಥಿಗಳು ಬಸ್ ತಡೆದು ಕೆಲ ಕಾಲ ರಸ್ತೆ ತಡೆ ನಡೆಸಿ ಮಂಗಳವಾರ ಪ್ರತಿಭಟಿಸಿದರು.

ಪಾಳಾ ಸುತ್ತಮುತ್ತ ಪ್ರದೇಶದಿಂದ ನಿತ್ಯ ಬೆಳಗ್ಗೆ ನೂರಾರು ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಶಿರಸಿ ಹಾಗೂ ಮುಂಡಗೋಡ ಶಾಲಾ-ಕಾಲೇಜುಗಳಿಗೆ ಹೋಗುತ್ತಾರೆ. ಆದರೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣದಿಂದ ಮಕ್ಕಳು ಸರಿಯಾದ ಸಮಯಕ್ಕೆ ತರಗತಿಗೆ ಹಾಜರಾಗಲು ಸಾದ್ಯವಾಗದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ನಿತ್ಯ ಇದೇ ಪರಿಸ್ಥಿತಿ ಎದುರಿಸುವಂತಾಗಿದೆ. ಬೆಳಗ್ಗೆ ೭ರಿಂದ ೯ ಘಂಟೆ ನಡುವೆ ಬರುವ ಕೆಲ ಬಸ್‌ಗಳು ತುಂಬಿಕೊಂಡಿರುತ್ತವೆ. ಇದರಿಂದ ವಿದ್ಯಾರ್ಥಿಗಳನ್ನು ಬಿಟ್ಟು ಹೋಗುತ್ತಾರೆ. ಅಲ್ಲದೇ ನಿರ್ವಾಹಕರು ಹಾಗೂ ಚಾಲಕರು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸಬೇಕೆಂದು ಪಟ್ಟುಹಿಡಿದರು.

ಸ್ಥಳಕ್ಕಾಗಮಿಸಿದ ಮುಂಡಗೋಡ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಬಳಿಕ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಸುದಿರ್ಘ ಚರ್ಚೆ ನಡೆಸಲಾಯಿತು. ಇನ್ನು ಮುಂದೆ ತೊಂದರೆಯಾಗದಂತೆ ಬಸ್ ಬಿಡಲಾಗುವುದೆಂದು ಮುಂಡಗೋಡ ಬಸ್ ಡಿಪೋ ಮ್ಯಾನೇಜರ್ ಭರವಸೆ ನೀಡಿದರು. ೨ ದಿನದಲ್ಲಿ ಈ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿ ಪ್ರತಿಭಟನೆ ಕೈಬಿಡಲಾಯಿತು.

ಸುಮಾರು ೧ ಘಂಟೆಗಳ ಕಾಲ ಶಿರಸಿ-ಹುಬ್ಬಳ್ಳಿ ಹೆದ್ದಾರಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಹತ್ತಾರು ಬಸ್, ಕಾರು ಮುಂತಾದ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ದೂರ ಪ್ರಯಾಣಿಸಬೇಕಾದ ಪ್ರಯಾಣಿಕರು ಮುಂದೆ ಹೋಗಲಾಗದೆ ಇಲ್ಲಿಯೇ ಕಾಲ ಕಳೆಯುವಂತಾಗಿ ತೊಂದರೆ ಅನುಭವಿಉವಂತಾಯಿತು.