ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಸ್ವಚ್ಛ ಮಾಡಿದ ವಿಚಾರ ಅಂಗವಾಗಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಾ. ಬಿ. ಆರ್.ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಹೊಸಪೇಟೆ: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಸ್ವಚ್ಛ ಮಾಡಿದ ವಿಚಾರ ಅಂಗವಾಗಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಾ. ಬಿ. ಆರ್.ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡ್ ರಾಜ್ಯದಲ್ಲಿ ಭಾಷಣ ಮಾಡಿದ್ದ ಸ್ಥಳವನ್ನು ಅಪವಿತ್ರ ಆಗಿದೆ ಎಂದು ಗೋಮೂತ್ರ ಹಾಕಿ ಶುದ್ಧೀಕರಿಸುವ ಮೂಲಕ ದೇಶದ ಅತ್ಯಂತ ಹಿರಿಯ ಮುಖಂಡರಿಗೆ ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಈ ವೇಳೆ, ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು. ಈ ಕುರಿತು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ರವಿಕುಮಾರ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಅಲ್ಲಾಭಕ್ಷಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಡಿ. ವೆಂಕಟರಮಣ, ಸೇವಾದಳದ ಜಿಲ್ಲಾ ಸಂಘಟಕ ಬಿ. ಮಾರೆಣ್ಣ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಣ್ಣದಮನೆ ಸೋಮಶೇಖರ್, ವಕೀಲರಾದ ಎಚ್ ಮಹೇಶ್, ನಗರಸಭೆ ಸದಸ್ಯರಾದ ಎಚ್.ಕೆ. ಮಂಜುನಾಥ, ರಾಘವೇಂದ್ರ ಗುಜ್ಜಲ, ಸಣ್ಣ ಮಾರೆಪ್ಪ, ಶಿವಕುಮಾರ, ರಘು ಕುಮಾರ್, ಕೆ.ಇಮ್ತಿಯಾಜ, ಸಾಲಿ ವೆಂಕಟೇಶ್, ಯೋಗಲಕ್ಷ್ಮೀ, ಅನಿತಾ, ಪ್ರಮೋದ್ ಪುಣ್ಯ ಮೂರ್ತಿ, ಶ್ರೀನಿವಾಸ, ಈ. ಅಶೋಕ, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಪ್ರದೀಪ್ ನಾಯಕ, ದೇವರಮನೆ ಕನ್ನೇಶ್ವರ, ಚಾಂದ್, ಮೌಲಾಲಿ, ರಾಮಾಂಜಿನಿ, ಸಜ್ಜಾದ್ ಖಾನ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.