ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 1,450 ಕೋಟಿ ರು. ಹಗರಣವಾಗಿರುವುದನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನೊಂದಾಯಿತ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಮೂರು ವರ್ಷಗಳಿಗೊಮ್ಮೆ ನವೀಕರಿಸಬೇಕು. ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಆರು ಸಾವಿರ ರು.ಗಳಿಗೆ ಹೆಚ್ಚಿಸಿ ಪ್ರತಿ ತಿಂಗಳು 1 ರಿಂದ 5 ನೇ ತಾರೀಖಿನೊಳಗೆ ಪಾವತಿಸಬೇಕು.

ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಸಂಗ್ರಹಿಸಲಾಗಿರುವ ಸೆಸ್ ಹಣ ಲೂಟಿಯಾಗಿರುವ ಬಗ್ಗೆ ಕಾರ್ಮಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಂಡು ಕಟ್ಟಡ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವಂತೆ ಆಗ್ರಹಿಸಿದರು.


ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ರಾಜ್ಯಾಧ್ಯಕ್ಷ ಮಂಜುನಾಥ, ಉಪಾಧ್ಯಕ್ಷರುಗಳಾದ ಸಿ.ಕೆ.ಗೌಸ್‍ಪೀರ್, ಎಂ.ಆರ್.ನರಸಿಂಹಸ್ವಾಮಿ, ಎಂ.ಗೌಸ್‍ಖಾನ್, ಸೈಯದ್ ನಾದಿಆಲಿ, ಈಶ್ವರಪ್ಪ ಡಿ, ರಾಜಪ್ಪ ಈ, ತಿಮ್ಮಯ್ಯ ಎಂ, ಚಾಂದ್‍ಪೀರ್, ಬಸವರಾಜ್ ವೈ, ಕೆ.ರಾಜಪ್ಪ, ರಾಘವೇಂದ್ರ ಈ.ಆರ್.ಮಹಂತಪ್ಪ, ಸಲೀಂ, ಎಚ್.ವೃಷಬೇಂದ್ರ, ಭರತ್ ಎಸ್, ಕೆ.ಲಕ್ಷ್ಮಣ್, ಮೊಹಮದ್ ರಫಿ, ಪ್ರಸನ್ನ ಡಿ.ಎನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.