ಪರಿಹಾರಕ್ಕೆ ಆಗ್ರಹಿಸಿ ಹಿಡಕಲ್‌ ಸಂತ್ರಸ್ತರಿಂದ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಹಿಡಕಲ್‌ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದಕೊಂಡು 43 ವರ್ಷ ಕಳೆದರೂ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ ಸಂತ್ರಸ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹುಕ್ಕೇರಿ ತಾಲೂಕಿನ ಬೀರ‌ನಹಳ್ಳಿ, ಮನಗುತ್ತಿ, ಇಸ್ಲಾಂಪುರ, ಗುಡಗನಟ್ಟಿ, ಹಳೇ ವಂಟಮೂರಿ ಗ್ರಾಮದ ಸಂತ್ರಸ್ತರು ಪ್ರತಿಭಟನೆ ನಡೆಸಿ ನಮಗೆ ನ್ಯಾಯ ನೀಡುವಂತೆ ಆಗ್ರಹಿಸಿದರು. ಜಮೀನು ಕಳೆದುಕೊಂಡು 43 ವರ್ಷಗಳಿಂದ 58 ಕುಟುಂಬಗಳು ಪರದಾಡುತ್ತಿವೆ. ಕಚೇರಿಯಿಂದ ಕಚೇರಿ ಅಲೆಯುತ್ತ ಬಂದರೂ ಪರಿಹಾರ ಸಿಕ್ಕಿಲ್ಲ. ರಾಜ್ಯ ಸರ್ಕಾರ ಜಮೀನು ಮಂಜೂರು ಮಾಡಿದೆ. ಆಧರೆ, ಅಧಿಕಾರಿಗಳು ಪಹಣಿ ಪತ್ರ ತೋರಿಸುತ್ತಿಲ್ಲ. ಬರುವ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಸಂತ್ರಸ್ತರಿಗೆ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿದರು.

1980ರಲ್ಲಿ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಜಮೀನು ಮಂಜೂರು ಮಾಡಲಾಗಿದೆ. ಆದರೆ, ಈವರಗೆ ಪಹಣಿ ಪತ್ರ, ಜಮೀನನ್ನು ಅಧಿಕಾರಿಗಳು ನೀಡುತ್ತಿಲ್ಲ. ಹಾಗಾಗಿ,ಭೂ ಪರಿಹಾರ, ಬೆಳೆ ಪರಿಹಾರ ನೀಡಬೇಕು. ಮನೆಗಳನ್ನ ಕಳೆದುಕೊಂಡಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.