ರಸ್ತೆ ಸಂಪೂರ್ಣ ಹೊಂಡಮಯವಾದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವುದನ್ನು ಖಂಡಿಸಿ ತಾಲೂಕಿನ ಕರಗಿನಕೊಪ್ಪ ಗ್ರಾಮಸ್ಥರು ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಹೊಂಡಗಳಲ್ಲಿ ಬಾಳೆಗಿಡಗಳನ್ನು ನೆಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ರಸ್ತೆ ದುರಸ್ತಿಗೆ ಆಗ್ರಹ; ನಿರ್ಲಕ್ಷ್ಯ ಮುಂದುವರಿದರೆ ಉಗ್ರ ಹೋರಾಟದ ಎಚ್ಚರಿಕೆ
ಕನ್ನಡಪ್ರಭ ವಾರ್ತೆ ಮುಂಡಗೋಡರಸ್ತೆ ಸಂಪೂರ್ಣ ಹೊಂಡಮಯವಾದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವುದನ್ನು ಖಂಡಿಸಿ ತಾಲೂಕಿನ ಕರಗಿನಕೊಪ್ಪ ಗ್ರಾಮಸ್ಥರು ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಹೊಂಡಗಳಲ್ಲಿ ಬಾಳೆಗಿಡಗಳನ್ನು ನೆಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಸಾಕಷ್ಟು ವಾಹನ ಸಾಂದ್ರತೆ ಹೊಂದಿರುವ ಈ ಶಿರಸಿ-ಹುಬ್ಬಳ್ಳಿ ಹೆದ್ದಾರಿ ಕರಗಿನಕೊಪ್ಪ ಗ್ರಾಮದ ಮಧ್ಯ ಭಾಗದಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು, ಮಳೆ ಬಂದಾಗ ಹೊಂಡಗಳಲ್ಲಿ ನೀರು ನಿಂತು ರಸ್ತೆಯ ಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಈ ಮಾರ್ಗದಲ್ಲಿ ನಿತ್ಯ ಸಂಚರಿಸುವ ದ್ವಿಚಕ್ರ ವಾಹನಗಳು ಸೇರಿದಂತೆ ವಿವಿಧ ವಾಹನಗಳು ಅಪಘಾತಕ್ಕೀಡಾಗುತ್ತಿವೆ. ರಸ್ತೆ ಮೂಲಕ ಸಂಚರಿಸುವುದೇ ದುಸ್ತರವಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.ರಸ್ತೆ ದುರಸ್ತಿಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಕ್ಷಣ ರಸ್ತೆ ದುರಸ್ತಿ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುವುದು ಗ್ರಾಮಸ್ಥರ ಒತ್ತಾಯವಾಗಿದೆ.ಈ ಸಂದರ್ಭ ಕರವೇ ಸ್ವಾಭಿಮಾನಿ ಬಣದ ತಾಲೂಕಾಧ್ಯಕ್ಷ ಮಂಜುನಾಥ ಲಮಾಣಿ, ಚಂದ್ರು ಲಮಾಣಿ, ವಿನೋದ ಲಮಾಣಿ, ಕೃಷ್ಣ ಲಮಾಣಿ ಮುಂತಾದವರು ಪಾಲ್ಗೊಂಡಿದ್ದರು.