ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಪಟ್ಟಣದಲ್ಲಿ ಗುರುವಾರ ತಾಲೂಕು ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಿವಿಗೆ ಚೆಂಡು ಹೂ ಇಟ್ಟುಕೊಂಡು ಖಾಲಿ ಚೆಂಬು ಮತ್ತು ತೆಂಗಿನ ಕಾಯಿ ಚಿಪ್ಪು ಪ್ರದರ್ಶಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಟಿ.ಮರಿಯಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ವೇಳೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಪುತ್ರ ಹಾಗೂ ಬಿಜೆಪಿ ಮುಖಂಡ ಎಲ್.ಎಸ್.ಚೇತನ್ಗೌಡ ಮಾತನಾಡಿ, ಚುನಾವಣೆ ವೇಳೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲಾ ವರ್ಗದ ಜನರಿಗೆ ಅನ್ಯಾಯ ಮಾಡಿಕೊಂಡು ಬಂದಿದೆ ಎಂದು ದೂರಿದರು.5 ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಸಲುವಾಗಿ ವಿನಾಕಾರಣ ಹಲವು ರೀತಿಯ ತೆರಿಗೆ ಸೇರಿದಂತೆ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಿಸಿದೆ ಎಂದು ಖಂಡಿಸಿದರು. ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಈಗಾಗಲೇ ಕಾಂಗ್ರೆಸ್ ಸರ್ಕಾರ ವಿದ್ಯುತ್, ಸ್ಟಾಂಪ್ಡ್ಯೂಟಿ ಮತ್ತು ಅಬಕಾರಿ ಶುಲ್ಕ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಭಾರಿ ಅನ್ಯಾಯ ಮಾಡಿದೆ. ಈಗ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ತಾಲೂಕು ಬಿಜೆಪಿ ಅಧ್ಯಕ್ಷ ಸೋಮಶೇಖರ್, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಅನುರಾಧ, ತಾಲೂಕು ಸಂಘಟನಾ ಕಾರ್ಯದರ್ಶಿ ಹೇಮರಾಜು, ಮುಖಂಡರಾದ ತೊಳಲಿ ಕೃಷ್ಣಮೂರ್ತಿ, ರಮೇಶ್, ಕೆ.ಎನ್.ವಿಜಯಕುಮಾರ್, ಕರೀಗೌಡ, ಪರಮಶಿವ, ಸಿದ್ದಲಿಂಗಸ್ವಾಮಿ ಇದ್ದರು.