ಸಾರಾಂಶ
ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಖಂಡಿಸಿ ಹನೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಹನೂರು
ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ನಡೆಸಲಾಯಿತು.ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಎಸಗಿದ ಆರೋಪಿಗಳನ್ನು ಕೂಡಲೇ ಬಂದಿಸಿ ಅವರಿಗೆ ಮರಣ ದಂಡನೆ ವಿಧಿಸುವುದರ ಜೊತೆಗೆ ಮಹಿಳೆಯರ ಮೇಲಿನ ಹೀನ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಇನ್ನೂ ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತವರಣ ನಿರ್ಮಿಸುವುದು, ಎಲ್ಲಾ ಹೆಣ್ಣುಮಕ್ಕಳ ವಸತಿ ನಿಲಯಗಳ ಬಳಿ ಸೂಕ್ತ ಭದ್ರತೆ ಕಲ್ಪಿಸುವುದರ ಜೊತೆಗೆ ಮಹಿಳೆಯರ ವಿರುದ್ಧ ನಡೆಯುವ ಎಲ್ಲಾ ಅಪರಾಧಗಳ ದೌರ್ಜನ್ಯಗಳ ಕುರಿತು ರಾಜ್ಯ / ಕೇಂದ್ರ ಸರ್ಕಾರಗಳು ಅತ್ಯಂತ ತುರ್ತಾಗಿ ಕ್ರಮ ಕೈಗೊಂಡು ನ್ಯಾಯಾಲಯದಲ್ಲಿ ಮಹಿಳೆಯರ ಮೇಲಿನ ಪ್ರಕರಣಗಳು ತ್ವರಿತವಾಗಿ ವಿಲೇವಾರಿ ಮಾಡುವುದು ಮತ್ತು ತಪ್ಪಿತಸ್ತರಿಗೆ ಶಿಕ್ಷೆ ನೀಡಿ ಮಹಿಳೆಯರು ನಿರ್ಭೀತಿಯಿಂದ ಜೀವಿಸಲು ತಳಮಟ್ಟದಿಂದ ರಾಷ್ಟ್ರಮಟ್ಟದವರೆಗೂ ಕಾನೂನು ರೀತಿಯಲ್ಲಿ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿದರು. ತಾಲೂಕು ದಂಡಾಧಿಕಾರಿ ಗುರುಪ್ರಸಾದ್ ಅವರಿಗೆ ಪ್ರತಿಭಟನೆ ನಡೆಸಿ ಕಚೇರಿ ಮುಂಭಾಗ ಮನವಿ ಪತ್ರ ಸಲ್ಲಿಸಲಾಯಿತು. ಜೊತೆಗೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನೀವು ನೀಡಿರುವ ಮನವಿಯನ್ನು ಕಳುಹಿಸಿಕೊಡುತ್ತೇನೆ ಎಂದು ಮನವಿ ಸ್ವೀಕರಿಸಿದರು.