ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ

| Published : Feb 11 2025, 12:45 AM IST

ಸಾರಾಂಶ

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಪ್‌ಗಳನ್ನು ಅನ್ ಇಸ್ಟಾಲ್ ಮಾಡಿ, ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರುಕಂದಾಯ ಇಲಾಖೆಯ ಆಧಾರ ಸ್ತಂಭಗಳಾಗಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ ಕಚೇರಿ, ಕಾಲ ಕಾಲಕ್ಕೆ ಬಡ್ತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಕರೆಯ ಮೇರೆಗೆ ಎಲ್ಲಾ ವಿಎಒಗಳು ಕೆಲಸಕ್ಕೆ ಸಾಮೂಹಿಕ ರಜೆ ನೀಡಿ, ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಪ್‌ಗಳನ್ನು ಅನ್ ಇಸ್ಟಾಲ್ ಮಾಡಿ, ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಗ್ರಾಮ ಆಡಳಿತಾಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಪೀಠೋಪಕರಣ, ಗುಣಮಟ್ಟದ ಮೊಬೈಲ್, ಅದಕ್ಕೆ ಬೇಕಾದ ಸಿಮ್ ಮತ್ತು ಡಾಟಾ, ಲ್ಯಾಪ್ ಟಾಪ್ ಮತ್ತು ಪ್ರಿಂಟರ್‌ಗಳನ್ನು ನೀಡಬೇಕು. ವಿಎಓ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ವೇತನ ಶ್ರೇಣಿ ನಿಗದಿ, ಅಂತರಜಿಲ್ಲಾ ವರ್ಗಾವಣೆ, ಬಡ್ತಿ ಸೇರಿದಂತೆ ಹಲವು ಬೇಡಿಕೆಗಳನ್ನು 3-10-2024ರ ಸರಕಾರದ ಮುಖ್ಯ ಕಾರ್ಯದರ್ಶಿ ಅವರು ನೀಡಿದ ಭರವಸೆ ಈಡೇರಿಸಬೇಕೆಂದು ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಅಧೀಕ್ಷಕರಿಗೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷ ಎಸ್.ದೇವರಾಜು, ಗ್ರಾಮ ಆಡಳಿತ ಅಧಿಕಾರಿಗಳು ಅನುಭವಿಸುತ್ತಿರುವ ತೊಂದರೆಗಳನ್ನು ಪರಿಹರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮೊದಲ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲಾಗಿತ್ತು. ಆಗ ಅಂದಿನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ನಮ್ಮೊಂದಿಗೆ ಮಾತನಾಡಿ, ಬೇಡಿಕೆಗಳನ್ನು ಬಗೆಹರಿಸುವ ಭರವಸೆ ನೀಡಿದ ನಂತರ ಮುಷ್ಕರ ವಾಪಸ್ ಪಡೆಯಲಾಗಿತ್ತು.ಆದರೆ ಮೂರು ತಿಂಗಳು ಕಳೆದರೂ ಸರ್ಕಾರ ಕೆಲಸ ಸಣ್ಣ, ಪುಟ್ಟ ಬೇಡಿಕೆಗಳನ್ನು ಈಡೇರಿಸಿ, ಪ್ರಮುಖ ಬೇಡಿಕೆಗಳ ಕಡೆಗೆ ಗಮನವನ್ನೇ ಹರಿಸಿಲ್ಲ. ರೈತರು, ಸಾರ್ವಜನಿಕರೊಂದಿಗೆ ನೇರವಾಗಿ ಕೆಲಸ ಮಾಡುವ ನಮಗೆ ಒಂದು ಕಚೇರಿಯಿಲ್ಲ. ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವಾಗ ಶಾಲೆಯ ಜಗಲಿ, ಇಲ್ಲವೇ ಅರಳೀಮರದ ಕಟ್ಟೆ ಇಂತಹ ಸ್ಥಳಗಳಲ್ಲಿ ಕುಳಿತು ಕೆಲಸ ಮಾಡಬೇಕಾಗಿದೆ.ಹೆಣ್ಣು ಮಕ್ಕಳಿಗೆ ಒಂದು ಶೌಚಾಲಯವೂ ಇಲ್ಲ.ಅಲ್ಲದೆ ರಕ್ಷಣೆ ಎಂಬುದೇ ಇಲ್ಲವಾಗಿದೆ.ವಿವಾದ ವಿರುವ ಭೂಮಿಗಳ ದುರಸ್ತಿಯಂತಹ ಸಂದರ್ಭದಲ್ಲಿ ಜೀವ ಕೈಯಲ್ಲಿ ಹಿಡಿದು ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಜಿಲ್ಲಾಡಳಿತ ಎಲ್ಲಾ ವೃತ್ತಗಳಲ್ಲಿಯೂ ಸುಸಜ್ಜಿತ ಕಚೇರಿ, ಕಚೇರಿಗೆ ಅಗತ್ಯವಿರುವ ಪೀಠೋಪಕರಣ, ಕೆಲಸಗಾರರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂಬುದು ನಮ್ಮಗಳ ಆಗ್ರಹವಾಗಿದೆ ಎಂದರು.ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹಗಲಿರುಳೆನ್ನದೆ ಕೆಲಸ ಮಾಡುತಿದ್ದು, ಇವರ ಸಾಂಸಾರಿಕ ಜೀವನ ಚನ್ನಾಗಿರಬೇಕು ಎಂದರೆ, ಕೆಸಿಎಸ್‌ಆರ್ ನಿಯಮಕ್ಕೆ 16 ಎ ಕಲಂ 2ಗೆ ತಿದ್ದುಪಡಿ ತಂದು ಅಂತರರಾಜ್ಯ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು. ಅನುಕಂಪದ ಆಧಾರದಲ್ಲಿ ಕೆಲಸ ನೀಡುವ ವೃಂದ ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಬೇಕು. ಕರ್ತವ್ಯದ ಸಂದರ್ಭದಲ್ಲಿ ಜೀವ ಹಾನಿಗೆ ಒಳಗಾಗುವ ಕುಟುಂಬಕ್ಕೆ ಐವತ್ತು ಲಕ್ಷ ರು. ಪರಿಹಾರ ನೀಡಬೇಕು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎರಡನೇ ಹಂತದ ಮುಷ್ಕರ ಆರಂಭಗೊಂಡಿದೆ. ರಾಜ್ಯದ ಎಲ್ಲಾ ತಾಲೂಕು ಕಚೇರಿಗಳ ಮುಂದೆ ಪ್ರತಿಭಟನೆ ನಡೆಯುತ್ತಿದ್ದು, ಸರಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈಡೇರಿಸಬೇಕೆಂದು ಎಸ್.ದೇವರಾಜು ಆಗ್ರಹಿಸಿದರು.ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಖ್ಯಸ್ಥರಿಗೆ ಹಾಗೂ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತುಮಕೂರು ಜಿಲ್ಲಾ ಶಾಖೆಯ ಪದಾಧಿಕಾರಿಗಳಾದ ಎನ.ರವಿಕುಮಾರ್, ಎನ್.ಜಿ.ಪುರುಷೋತ್ತಮ್, ಖಜಾಂಚಿ ರಾಘವೇಂದ್ರಸ್ವಾಮಿ, ಗೌರವಾಧ್ಯಕ್ಷ ಹೇಮಂತಕುಮಾರ್,ತಾಲೂಕು ಅಧ್ಯಕ್ಷರುಗಳಾದ ಕಲ್ಲೇಶ್, ಸುಮತಿ, ರವಿಕುಮಾರ್, ಜಗಧೀಶ್, ಬಸವರಾಜು, ರಾಜೇಶ್, ನವೀನ್‌ಕುಮಾರ್, ಕಾಂತರಾಜು, ವೆಂಕಟೇಶ್, ಪ್ರಸನ್ನಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಫೋಟೋ: ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಕರೆಯ ಮೇರೆಗೆ ಎಲ್ಲಾ ವಿಎಒಗಳು ಕೆಲಸಕ್ಕೆ ಸಾಮೂಹಿಕ ರಜೆ ನೀಡಿ ಮುಷ್ಕರ ಆರಂಭಿಸಿರುವುದು.