ಸಿಜೆಐ ಮೇಲಿನ ಶೂ ಎಸೆತ ಯತ್ನ ಖಂಡಿಸಿ ಪ್ರತಿಭಟನೆ

| Published : Oct 08 2025, 01:00 AM IST

ಸಾರಾಂಶ

ಭಾರತದ ಸಂವಿಧಾನ ಮತ್ತು ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ತತ್ವಗಳನ್ನು ಎತ್ತಿಹಿಡಿಯುವ ಭಾರತದ ಮುಖ್ಯ ನ್ಯಾಯಮೂರ್ತಿ ಅವರ ಮೇಲೆಯೇ ದಾಳಿ ಮಾಡುತ್ತಾರೆಂದರೆ ಜನಸಾಮಾನ್ಯರ ಪಾಡೇನು? ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಘಟನೆಯನ್ನು ತೀವ್ರವಾಗಿ ಖಂಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನ್ಯಾಯಾಲಯದೊಳಗೆ ಕಲಾಪಗಳು ನಡೆಯುತ್ತಿರುವಾಗಲೇ ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಪ್ರಕರಣ ಖಂಡಿಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಸಿಜೆಐ ಜಸ್ಟೀಸ್ ಬಿ.ಆರ್. ಗವಾಯಿ ಅವರತ್ತ ಶೂ ಎಸೆದ ರಾಕೇಶ್ ಕಿಶೋರ್ ಎಂಬ ವಕೀಲನ ಕೃತ್ಯ ಅತ್ಯಂತ ಆಘಾತಕಾರಿ ವಿಷಯವಾಗಿದೆ. ಆ ಮೂಲಕ ಭಾರತದ ಸಂವಿಧಾನ ಮತ್ತು ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ತತ್ವಗಳನ್ನು ಎತ್ತಿಹಿಡಿಯುವ ಭಾರತದ ಮುಖ್ಯ ನ್ಯಾಯಮೂರ್ತಿ ಅವರ ಮೇಲೆಯೇ ದಾಳಿ ಮಾಡುತ್ತಾರೆಂದರೆ ಜನಸಾಮಾನ್ಯರ ಪಾಡೇನು? ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಘಟನೆಯನ್ನು ತೀವ್ರವಾಗಿ ಖಂಡಿಸಿದರು.ಈ ವೇಳೆ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಸಿಜೆಐ ಮೇಲಿನ ಹಲ್ಲೆ ಸಂವಿಧಾನ ಆ ಮೂಲಕ ಭಾರತಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಿಜೆಐ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಈ ಪ್ರಕರಣದ ಆರೋಪಿ ಯಾವ ಪಶ್ಚಾತ್ತಾಪವೂ ಇಲ್ಲದೆ ಮಾಧ್ಯಮಗಳಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿರುವುದನ್ನು ನೋಡಿದರೆ ಎಂತಹ ಆತಂಕಕಾರಿ ಅನಾಹುತಕ್ಕೆ ಪ್ರಚೋದಿಸುತ್ತಿದೆ ಎಂದು ಈ ಪ್ರಕರಣ ತೋರಿಸಿಕೊಟ್ಟಿದ್ದೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಕಾನೂನು ತಕ್ಕ ಕ್ರಮಕೈಗೊಳ್ಳಬೇಕು ಮತ್ತು ಜನತೆ ಇಂತಹ ಮನಸ್ಥಿತಿಯ ಬೆಳವಣಿಗೆಯನ್ನು ಆರಂಭದಲ್ಲೇ ಚಿವುಟಿಹಾಕಬೇಕು ಎಂದು ಹೇಳಿದರು. ದಸಂಸ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ಈರೇಶ್ ಹಿರೇಹಳ್ಳಿ ಮಾತನಾಡಿ, ಬಿ.ಆರ್ .ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ. ಸಿಜೆಐ ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೋರಲಿನಿಂದ ಖಂಡಿಸಬೇಕೆಂದು ಮನವಿ ಮಾಡಿದರು. ಹಿರಿಯ ದಲಿತ ಮುಖಂಡರಾದ ರಾಜಶೇಖರ್ ಹುಲಿಕಲ್ ಮಾತನಾಡಿ, ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಹೇಳಿದರು. ಸಂವಿಧಾನ ಒಂದು ಅಭಿಯಾನದ ರಾಜ್ಯ ಸಂಚಾಲಕ ರಾಜು ಗೊರೂರು, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ನವೀನ್ ಕುಮಾರ್, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಎಂ.ಜಿ. ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ದಸಂಸ ಮುಖಂಡರಾದ ಅಂಬುಗ ಮಲ್ಲೇಶ್, ದುಮ್ಮಿ ಕೃಷ್ಣ, ಡಿಎಚ್‌ಎಸ್ ಮುಖಂಡರಾದ ರಾಜು ಸಿಗರನಹಳ್ಳಿ, ಲಿಂಗರಾಜು ಬಿಎಸ್, ಪ್ರಸನ್ನ ಕುಮಾರ್ , ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ಬೌದ್ಧ ಮಹಾ ಸಭಾದ ವೀರಭದ್ರಪ್ಪ, ಲಕ್ಕಪ್ಪ, ಮಾದಿಗ ದಂಡೋರ ಮುಖಂಡ ರಂಗಪ್ಪ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.