ರೇಣುಕಾಸ್ವಾಮಿ ಕೊಲೆ ಕೇಸು ನ್ಯಾಯಾಂಗ ತನಿಖೆಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ

| Published : Jul 05 2024, 12:45 AM IST

ಸಾರಾಂಶ

ಬಳ್ಳಾರಿ ಜಿಲ್ಲಾ ಪ್ರಜ್ಞಾವಂತ ನಾಗರಿಕರ ವೇದಿಕೆ ಸದಸ್ಯರು ಹಾಗೂ ಸಾರ್ವಜನಿಕರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು

ಬಳ್ಳಾರಿ: ಚಿತ್ರನಟ ದರ್ಶನ್ ಹಾಗೂ ಸಹಚರರಿಂದ ನಡೆದಿದೆ ಎನ್ನಲಾದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಪ್ರಜ್ಞಾವಂತ ನಾಗರಿಕರ ವೇದಿಕೆ ಸದಸ್ಯರು ಹಾಗೂ ಸಾರ್ವಜನಿಕರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.ಚಿತ್ರದುರ್ಗದ ನಿವಾಸಿ ರೇಣುಕಸ್ವಾಮಿಯನ್ನು ಅಪಹರಿಸಿ ಬೆಂಗಳೂರಿನ ಪಟ್ಟಣಗೇರೆ ಶೆಡ್‌ವೊಂದರಲ್ಲಿ ಅಕ್ರಮವಾಗಿ ಕೂಡಿ ಹಾಕಿ, ಅತ್ಯಂತ ಅಮಾನುಷವಾಗಿ ರಾಕ್ಷಸರ ರೀತಿಯಲ್ಲಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಲೆ ಮಾಡಿರುವ ಪ್ರಮುಖ ಆರೋಪಿಗಳಾದ ನಟ ದರ್ಶನ್, ನಟಿ ಪವಿತ್ರಗೌಡ ಹಾಗೂ ಇವರ ಸಹಚರರನ್ನು ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿರುವುದು ಶ್ಲಾಘನೀಯ ಎಂದರು.

ಮುಖ್ಯಮಂತ್ರಿ, ಗೃಹಮಂತ್ರಿ, ಕಾನೂನು ಮಂತ್ರಿಗಳು ಈ ಪ್ರಕರಣದ ಆರೋಪಿಗಳನ್ನು ಬಂಧಿಸುವ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕಾರ್ಯನಿರ್ವಹಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಆರೋಪಿಗಳು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಮತ್ತು ಆತನಿಗೆ ಚಿತ್ರರಂಗದ ನಟರು, ನಿರ್ದೇಶಕರು ಮತ್ತು ಪ್ರಭಾವಿ ರಾಜಕಾರಣಿಗಳ ಬೆಂಬಲ ಇರುವುದರಿಂದ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ವೇಳೆ ಕಾಣದ ಕೈಗಳು, ಪೊಲೀಸರು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಂಭವವಿದೆ. ಕೊಲೆ ಅಪರಾಧಿಗಳಿಗೆ ಶಿಕ್ಷೆಯಾಗುತ್ತೆಯೋ ಅಥವಾ ಇಲ್ಲ ಎನ್ನುವ ಅನುಮಾನ ಪ್ರಜ್ಞಾವಂತ ಜನ ಸಾಮಾನ್ಯರಲ್ಲಿ ಕಾಡುತ್ತಿದೆ ಎಂದರು.

ಕೊಲೆ ಪ್ರಕರಣದಲ್ಲಿ ಭಾಗಿಯಾದವರಿಗೆ ಶಿಕ್ಷಿಯಾಗಬೇಕಾದರೆ ಮತ್ತು ರೇಣುಕಾ ಸ್ವಾಮಿಯ ಕೊಲೆಗೆ ನ್ಯಾಯ ಸಿಗಬೇಕಾದರೆ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕಾಗಿದೆ. ಹೀಗಾಗಿ ಈ ಗಂಭೀರ ಪ್ರಕರಣವನ್ನು ನಿವೃತ್ತ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸುವುದು ಸೂಕ್ತವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆ.ಎಂ. ಮಹೇಶ್ವರ ಸ್ವಾಮಿ ಮಾತನಾಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಸಾವಿಗೀಡಾದ ರೇಣುಕಾಸ್ವಾಮಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಪ್ರಮುಖರಾದ ಪಿ.ಬಂಡೇಗೌಡ, ಎಚ್.ಕೆ. ಗೌರಿಶಂಕರ್, ಅರವಿ ಬಸವನಗೌಡ, ಎಂ.ಸಿ. ರಾವ್, ಡಾ.ವಸ್ತ್ರದ, ಕೆ.ಎಂ. ಕೊಟ್ರೇಶ್, ಜಿ.ನೀಲಕಂಠಪ್ಪ, ಎಸ್.ಎಂ. ಷಡಾಕ್ಷರಯ್ಯ, ವೀರಭದ್ರಗೌಡ, ಶ್ರೀಧರಗೌಡ ಜಾಲಿಹಾಳ್, ಜಿತೇಂದ್ರಸ್ವಾಮಿ, ಕೋಳೂರು ಚಂದ್ರಶೇಖರಗೌಡ, ಅಂಬರೇಷಯ್ಯ, ಅಲ್ಲೀಪುರ ಸಿದ್ಧರಾಮಶಾಸ್ತ್ರಿ, ನಟರಾಜ್ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.