ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಉಪನ್ಯಾಸಕರ ನೇಮಿಸಿ ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಪೂಡೆಂಟ್ಸ್ ಆರ್ಗನೈಜೇಷನ್(ಎಐಡಿಎಸ್ಓ) ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.ಈವೇಳೆ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕಿರಣ್ ಕುಮಾರ್ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪೂರ್ಣಾವಧಿ ಉಪನ್ಯಾಸಕರ ಕೊರತೆ ಹೆಚ್ಚಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಆತಂಕಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೂ ಸಹ ಇಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಆತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ ಎಂದರು.
ಉಪನ್ಯಾಸಕರ ನೇಮಕಾತಿಗೆ ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು ಎಂದು ಒತ್ತಾಯಿಸಿದರು.ಅತಿಥಿ ಉಪನ್ಯಾಸಕರ ನೇಮಿಸಿ
ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯ ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳನ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಮತ್ತು ಸರ್ಕಾರಿ ಪ್ರಥಮದರ್ಜೇ ಕಾಲೇಜುಗಳ ವಿಧ್ಯಾರ್ಥಿಗಳು ಇದ್ದರು.