ಸಾರಾಂಶ
ಚಿಂಚೋಳಿಯ ಚಂದಾಪೂರ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಲ್ಲಿ ಪ್ರಾಚಾರ್ಯರು, ಪ್ರಾಧ್ಯಾಪಕರು ಸಮಯ ಪಾಲನೆ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳ ಆಕ್ರೋಶ. ಭಾರತ ಮುಕ್ತಿ ಮೋರ್ಚಾ ವತಿಯಿಂದ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಚಿಂಚೋಳಿ
ಪಟ್ಟಣದ ಚಂದಾಪೂರ ನಗರದಲ್ಲಿ ಇರುವ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಪ್ರಾಚಾರ್ಯರು, ಪ್ರಾಧ್ಯಾಪಕರು ಕಾಲೇಜಿನ ಕರ್ತವ್ಯಕ್ಕೆ ಸಮಯ ಪಾಲನೆ ಮಾಡದೆ ಹಳ್ಳಿಯಿಂದ ಬರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಭಾರಿ ತೊಂದರೆ ಆಗಿದೆ ಎಂದು ಭಾರತ ಮುಕ್ತಿ ಮೋರ್ಚಾ ಕಾರ್ಯಕರ್ತರು ತಹಸೀಲ್ ಕಚೇರಿ ಮುಂದೆ ಪ್ರತಿಭಟಿಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಭಾರತ ಮುಕ್ತಿ ಮೋರ್ಚ ಮುಖಂಡ ಮಾರುತಿ ಗಂಜಗಿರಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಪದವಿ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ತಾಲೂಕಿನ ಸಮಾಜ ಕಲ್ಯಾಣ, ಬಿಸಿಎಂ, ಮೊರಾರ್ಜಿ ದೇಸಾಯಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ, ಊಟ ಹಾಗೂ ಮೂಲಭೂತ ಸೌಲಭ್ಯಗಳು ಕೊಡುವುದಕ್ಕಾಗಿ ಅಧಿಕಾರಿಗಳು ಇಗಿನಿಂದಲೇ ಅಗತ್ಯ ಕ್ರಮಕೈಕೊಳ್ಳಬೇಕು ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಿಸಿಕೊಡಬೇಕು. ತಾಲೂಕಿನ ಎಲ್ಲ ಸರ್ಕಾರಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ ಎಂದು ಅಧಿಕಾರಿಗಳ ಬೇಜವಾಬ್ದಾರಿತನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಗೋಪಾಲ ಪೂಜಾರಿ, ಪುಟ್ಟರಾಜ, ರಾಜಕುಮಾರ, ರಾಹುಲ್, ಸುಂದರ, ಮಲ್ಲಿಕಾರ್ಜುನ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಮಾತನಾಡಿದರು.
ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಸಲ್ಲಿಸಿದರು.ಚಂದಾಪೂರ ಕನಕದಾಸ ವೃತ್ತದಿಂದ ಮಿನಿ ವಿಧಾನಸೌಧವರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
೨ಜಿಯು-ಸಿಎಚ್ಐ೧