ಕನ್ನಡಪ್ರಭ ವಾರ್ತೆ ಬೆಳಗಾವಿ

ವಾಡಿಕೆಗಿಂತ ತೀವ್ರ ಮಳೆ ಕೊರತೆಯಿಂದ ಜಿಲ್ಲೆಯ ಕೃಷಿ ಚಟುವಟಿಕೆಗಳು ಸಂಪೂರ್ಣ ಹಳಿ ತಪ್ಪಿದ್ದು, ಬೆಳಗಾವಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಸೋಮವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.ಈ ವೇಳೆ ಎಐಕೆಕೆಎಂಎಸ್ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಜಡಗನ್ನವರ ಮಾತನಾಡಿ, ಆರಂಭಿಕ ಮಳೆಯನ್ನು ನಂಬಿ ಬಿತ್ತನೆ ಮಾಡಿದ್ದ ಬೆಳೆಗಳು ನಂತರದ ಮಳೆ ಕೊರತೆ ಹಾಗೂ ತೀವ್ರ ಉಷ್ಣಾಂಶದಿಂದ ಒಣಗುತ್ತಿವೆ. ಸಾವಿರಾರು ರುಪಾಯಿ ಬಂಡವಾಳ ಹೂಡಿರುವ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಕೃಷಿ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ರೈತರು ಹಾಗೂ ಕೃಷಿ ಕಾರ್ಮಿಕರು ಜೀವನೋಪಾಯಕ್ಕಾಗಿ ನೆರೆಯ ರಾಜ್ಯಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಕ್ಕಳ ಶಿಕ್ಷಣಕ್ಕೂ ತೊಂದರೆಯಾಗುತ್ತಿದ್ದು, ಸಾಲದ ಹೊರೆ ಹಾಗೂ ಬರದ ಸಂಕಷ್ಟದಿಂದ ಕೆಲ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.ರಾಜ್ಯದ 157 ತಾಲೂಕುಗಳಲ್ಲಿ ಬರದ ಛಾಯೆ ಇದೆಂದು ಸರ್ಕಾರವೇ ಒಪ್ಪಿಕೊಂಡಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ ವೈಜ್ಞಾನಿಕ ಸಮೀಕ್ಷೆ ನಡೆಸದಿರುವುದು ಖಂಡನೀಯ. ಉನ್ನತಮಟ್ಟದ ಅಧಿಕಾರಿಗಳ ತಂಡವನ್ನು ಕಳುಹಿಸಿ ಮಳೆ ಕೊರತೆಯ ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವುದು, ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿನ ರೈತರ ಸಾಲಮನ್ನಾ ಮಾಡುವುದು, ಬಲವಂತದ ಸಾಲ ವಸೂಲಾತಿ ಸ್ಥಗಿತಗೊಳಿಸುವುದು, ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 200 ದಿನಗಳ ಉದ್ಯೋಗ ಹಾಗೂ ದಿನಕ್ಕೆ ₹600 ಕೂಲಿ ನಿಗದಿಪಡಿಸುವುದು, ಜಿಲ್ಲೆಯ ಕೆರೆಗಳ ಅಕ್ರಮ ಒತ್ತುವರಿ ತೆರವುಗೊಳಿಸಿ ಹೂಳೆತ್ತುವ ಕಾಮಗಾರಿ ಕೈಗೊಳ್ಳುವುದು ಮತ್ತು ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ಜಲಾಶಯಗಳಿಂದ ಕೆರೆಗಳಿಗೆ ನೀರು ಹರಿಸಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಕಲ್ಲಪ್ಪ ಬಿಜ್ಜನ್ನವರ, ಅಡಿವೆಪ್ಪ ಮೇಮನವರ್, ಕಲವ್ವ ಮಿಲಾನಟ್ಟಿ, ಅರ್ಜುನ ನಂದಿ, ವೀರವಪ್ಪ.ಮಿಲಾನಟ್ಟಿ, ಮಲವ್ವ ಇಟ್ನಾಳ, ಮಾದೇವಿ ಪಾಟೀಲ ಸೇರಿದಂತೆ ಇತರರು ಇದ್ದರು.ಬೇಡಿಕೆಗಳನ್ನು ಈಡೇರಿಸದಿದ್ದರೇ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು.

ಲಕ್ಷ್ಮಣ ಜಡಗನ್ನವರ, ಎಐಕೆಕೆಎಂಎಸ್ ರಾಜ್ಯ ಉಪಾಧ್ಯಕ್ಷರು.