ಗೌರವಧನ ಹೆಚ್ಚಳವೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಗೌರವಧನ ಹೆಚ್ಚಳವೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಕಾರ್ಯಕರ್ತೆಯರಿಗೆ 15,000 ರು. ಹಾಗೂ ಸಹಾಯಕಿಯರಿಗೆ 10,000 ರು. ಗೌರವಧನ ಹೆಚ್ಚಿಸಬೇಕು. 2011ರಿಂದ ನಿವೃತ್ತರಾದ ಎಲ್ಲಾ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚ್ಯುಟಿ ಹಾಗೂ ಸ್ವಯಂ ನಿವೃತ್ತರಿಗೂ ಗ್ರಾಚ್ಯುಟಿ ನೀಡಬೇಕು. ನಿವೃತ್ತರಿಗೆ ಮಾಸಿಕ ಪಿಂಚಣಿ ನೀಡಬೇಕು, ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಸಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ಕೇಂದ್ರದ ಕೆಲಸದ ಜೊತೆಗೆ ಬಲವಂತವಾಗಿ ಇತರೆ ಜವಾಬ್ದಾರಿ ಹೊರಿಸುವುದನ್ನು ನಿಲ್ಲಿಸಬೇಕು, ಇತರೆ ಜವಾಬ್ದಾರಿ ನಿರಾಕರಿಸುವ ಕಾರ್ಯಕರ್ತೆಯರ ವಿರುದ್ಧ ಕ್ರಮ ಜರುಗಿಸಿ ಅಮಾನತುಗೊಳಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಎಸ್ಐಆರ್ ಸಮೀಕ್ಷೆ ಮಾಡುವವರಿಗೆ ಹೆಚ್ಚುವರಿ ಗೌರವಧನ, ಖಾಯಂ ಸಂದಾಯ ಮಾಡಬೇಕು. ಸಮೀಕ್ಷೆ ವೇಳೆ ಅನಾರೋಗ್ಯಕ್ಕೆ ತುತ್ತಾದವರಿಗೆ ವೈದ್ಯಕೀಯ ವೆಚ್ಚ ಹಾಗೂ ಮೃತರಾದವರಿಗೆ 30 ಲಕ್ಷ ಪರಿಹಾರ ನೀಡಬೇಕು. 50 ವರ್ಷ ಮೇಲ್ಪಟ್ಟವರು ಮತ್ತು ಅನಾರೋಗ್ಯ ಸಮಸ್ಯೆ ಇರುವವರನ್ನು ಕೈಬಿಡಬೇಕು ಎಂಬುದು ಸೇರಿದಂತೆ ಸುಮಾರು 29 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಈ ಮೇಲಿನ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಫೆಡರೇಷನ್ನ ಜಿಲ್ಲಾಧ್ಯಕ್ಷೆ ವಿಶಾಲ ಕೆ.ಸಿ, ಕಾರ್ಯದರ್ಶಿ ವೇದಾವತಿ, ಮುಖಂಡರಾದ ಎನ್.ರವೀಂದ್ರ ಸಾಗರ್, ಪುಷ್ಪ ಸಾಗರ್, ಶಶಿಕಲಾ, ಗಾಯತ್ರಿ, ರೇಣುಕಾ, ಕಲಾವತಿ, ಗೀತಾ ಕರಿನಾಗೋಳ್ಳಿ, ಲೀಲಾವತಿ, ಕುಸುಮ, ಲಕ್ಷ್ಮಿ, ಮೀನಾಕ್ಷಿ ವಿ.ಆರ್., ಸುಶೀಲಾಬಾಯಿ ಸೇರಿದಂತೆ ನೂರಾರು ಕಾರ್ಯಕರ್ತೆಯರು ಉಪಸ್ಥಿತರಿದ್ದರು.