ಜ್ಯೋತಿ ಸಂಜೀವಿನಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

| Published : Jun 03 2025, 12:27 AM IST

ಸಾರಾಂಶ

ವಸತಿ ಶಾಲೆಗಳ ನೌಕರರು, ಸಮಾಜ ಕಲ್ಯಾಣ ಇಲಾಖೆ ಅಧೀನದ ಕ್ರೈಸ್ ವಸತಿ ಶಾಲೆಗಳ ಕಾಯಂ ಶಿಕ್ಷಕರು - ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ರಾಮನಗರಕಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಸತಿ ಶಾಲೆಗಳ ನೌಕರರು ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಿಗದಿಪಡಿಸಿರುವ ಪ್ರತಿಭಟನಾ ಸ್ಥಳದಲ್ಲಿ ಧರಣಿ ನಡೆಸಿದ ವಸತಿ ಶಾಲೆಗಳ ನೌಕರರು, ಸಮಾಜ ಕಲ್ಯಾಣ ಇಲಾಖೆ ಅಧೀನದ ಕ್ರೈಸ್ ವಸತಿ ಶಾಲೆಗಳ ಕಾಯಂ ಶಿಕ್ಷಕರು - ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್‌ಸಿ, ಎಸ್‌ಟಿ, ಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ಕಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸುವುದು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು ಎಂದು ಆಗ್ರಹ ಪಡಿಸಿದರು.ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು. ಕಾಯಂ ನೌಕರರಿಗೆ ಶೇಕಡ 10ರಷ್ಟು ವಿಶೇಷ ಭತ್ಯೆ ಮಂಜೂರು ಮಾಡಬೇಕು. ಈಗಲೂ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ರಾಜ್ಯದಲ್ಲಿ 830 ವಸತಿ ಶಾಲೆಗಳಿದ್ದು, ಅದರ ಅಡಿಯಲ್ಲಿ 6,800 ಸಾವಿರ ಕಾಯಂ ಉಪನ್ಯಾಸಕರು ಕಳೆದ 13 ವರ್ಷಗಳಿಂದಲೂ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ನ್ಯಾಯವಾಗಿ ಸಿಗಬೇಕಾದ ಸೌಲಭ್ಯಗಳನ್ನು ನೀಡದೆ ರಾಜ್ಯ ಸರ್ಕಾರ ವಂಚಿಸುತ್ತಾ ಬಂದಿದೆ ಎಂದು ಆರೋಪಿಸಿದರು.ಶಾಲಾ ಶಿಕ್ಷಣ ಇಲಾಖೆ ಮತ್ತು ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಗಳ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ವಸತಿ ಶಾಲಾ ನೌಕರರಿಗೆ ಸಿಗುತ್ತಿಲ್ಲ. 13 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರೂ, ಕಡಿಮೆ ವೇತನ ಇದೆ. ಶಾಲಾ ವಸತಿ ಗೃಹದಲ್ಲಿಯೇ ವಾಸವಾಗಿದ್ದೇವೆ. 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ತೆಗೆದುಕೊಳ್ಳಲಾಗುತ್ತಿದೆ. ಸಂಜೆ ವಿಶೇಷ ತರಗತಿ ತೆಗೆದುಕೊಳ್ಳುವ ವ್ಯವಸ್ಥೆಯೂ ಇದೆ. ಆದರೆ, ಜ್ಯೋತಿ ಸಂಜೀವಿನಿಯಾಗಲಿ, ಹೆಚ್ಚುವರಿ ಭತ್ಯೆಯಾಗಲಿ ಇಲ್ಲದಿರುವುದು ಶೋಚನೀಯ ಎಂದು ದೂರಿದರು.ಸರ್ಕಾರಿ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳಿಗೆ ಹೆಚ್ಚಿನ ಕಾರ್ಯಭಾರ ಇದೆ. ಅಲ್ಲದೆ, ಎಸ್ಸೆಸ್ಸೆಲ್ಸಿಯಲ್ಲಿ ವಸತಿ ಶಾಲೆಗಳು ಅತ್ಯುತ್ತಮ ಫಲಿತಾಂಶ ನೀಡುತ್ತಾ ಬಂದಿವೆ. ಆದ್ದರಿಂದ ಶೇಕಡ 10ರಷ್ಟು ಹೆಚ್ಚಿನ ಸೌಲಭ್ಯ ನೀಡಬೇಕು ಎಂದು ಧರಣಿನಿರತರು ಆಗ್ರಹಿಸಿದರು.ಮೇ‌ 26 ರಿಂದ 28 ರವರೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ. 29 ರಂದು ಎಲ್ಲ ವಸತಿ ಶಾಲೆಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗಿದೆ. ಶುಕ್ರವಾರ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗಿದೆ. ಶನಿವಾರ ಮುಖ್ಯಮಂತ್ರಿಗೆ ಮನವಿ ಕಳುಹಿಸಿಕೊಡಲಾಗಿದೆ. ಇಷ್ಟಾದರು ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಧರಣಿಯಲ್ಲಿ ಸಂಘದ ಅಧ್ಯಕ್ಷ ಸಿ.ವಿನಯ್, ಉಪಾಧ್ಯಕ್ಷೆ ಎ.ಪಿ.ಶಕುಂತಲಾ, ಪ್ರಧಾನ ಕಾರ್ಯದರ್ಶಿ ಸಿ.ವೆಂಕಟೇಶ್ , ಪದಾಧಿಕಾರಿಗಳಾದ ವಿಜಯ್ ಕುಮಾರ್, ಜಿ.ಸೌಮ್ಯ, ರಶ್ಮಿ, ಕರಿಯಪ್ಪ, ರುದ್ರೇಶ ಮತ್ತಿತರರು ಭಾಗವಹಿಸಿದ್ದರು.-------2ಕೆಆರ್ ಎಂಎನ್ 3.ಜೆಪಿಜಿರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ವಸತಿ ಶಾಲೆಗಳ ನೌಕರರು ಧರಣಿ ಸತ್ಯಾಗ್ರಹ ನಡೆಸಿದರು.