ಬಳ್ಳಾರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ಕೆಲಸ ನಿರ್ವಹಿಸಿರುವ ಕಾರ್ಮಿಕರ ಮೇ ಮತ್ತು ಜೂನ್ ತಿಂಗಳ ಬಾಕಿ ಕೂಲಿ ವೇತನವನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘದಿಂದ ನಗರದ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಿಇಒಗೆ ಮನವಿ ಸಲ್ಲಿಸಲಾಯಿತು.
ವೇತನ ಪಾವತಿಯಲ್ಲಿ ಉಂಟಾಗಿರುವ ವಿಳಂಬದಿಂದ ಗ್ರಾಮೀಣ ಕಾರ್ಮಿಕರು ಮತ್ತು ಅವರ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ಹರಿಸಲಾಗಿಲ್ಲ. ಇದರಿಂದ ಕೃಷಿ ಚಟುವಟಿಕೆ ಆರಂಭವಾಗದೆ ಕಾರ್ಮಿಕರು ತೀವ್ರ ಸಂಕಷ್ಟ ಎದುರಿಸುತ್ತಿರುವ ನಡುವೆ ಉದ್ಯೋಗಖಾತರಿ ಯೋಜನೆಯಡಿ ಕಾರ್ಯ ನಿರ್ವಹಿಸಿದ ಕಾರ್ಮಿಕರ ಬಾಕಿ ವೇತನ ಪಾವತಿಸದಿರುವುದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರಲ್ಲದೆ, ತಕ್ಷಣವೇ ಬಾಕಿ ವೇತನವನ್ನು ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ವೇತನವನ್ನು ನಿಗದಿತ ಅವಧಿಯೊಳಗೆ ಪಾವತಿಸುವಂತೆ ಆಗ್ರಹಿಸಿದರು.ಸಂಘದ ರಾಜ್ಯ ಸಮಿತಿ ಸದಸ್ಯ ಈ.ಹನುಮಂತಪ್ಪ, ಜಿಲ್ಲಾ ಅಧ್ಯಕ್ಷ ಗೋವಿಂದ್, ಜಿಲ್ಲಾ ಕಾರ್ಯದರ್ಶಿ ಗುರಳ್ಳಿರಾಜ, ಜಂಟಿ ಕಾರ್ಯದರ್ಶಿ ಖಾಸೀಂಸಾಬ್, ನರೇಗಾ ಉಳಿಸಿ ಸಮಿತಿ ತಾಲೂಕು ಅಧ್ಯಕ್ಷ ಕಲ್ಲುಕಂಬ ಪಂಪಾಪತಿ, ಯುವಜನ ಮುಖಂಡ ಕೋಳೂರು ಪಂಪಾಪತಿ, ಕುರುಗೋಡು ತಾಲೂಕು ಕಾರ್ಯದರ್ಶಿ ಎಚ್.ಎನ್. ಬಸವರಾಜ್, ಬಳ್ಳಾರಿ ತಾಲೂಕು ಕಾರ್ಯದರ್ಶಿ ಧನರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಹೊನ್ನೂರಪ್ಪ, ಮಲ್ಲಪ್ಪ, ಸಿದ್ದಲಿಂಗ, ರೈತರಾದ ಪಂಪನಗೌಡ, ದೊಡ್ಡಬಸವ, ವೆಂಕಟೇಶ್, ಮಾರೆಪ್ಪ, ಬುಗ್ಗೆಪ್ಪ, ಸೇರಿದಂತೆ ಹಲವಾರು ರೈತರು, ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.
ಮನರೇಗಾ ಕಾರ್ಮಿಕರ ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘದಿಂದ ಬಳ್ಳಾರಿಯ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.