ಸಾರಾಂಶ
ರಾಣಿಬೆನ್ನೂರು: ಕಬ್ಬು ಹಾಗೂ ಮೆಕ್ಕೆಜೋಳ, ಭತ್ತದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಬೇಕು ಹಾಗೂ ಇಲ್ಲಿಯ ಕಬ್ಬಿಗೂ ಪ್ರತಿಟನ್ಗೆ ₹3500 ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಗುರುವಾರ ಉತ್ತರ ಕರ್ನಾಟಕದ ಹೆಬ್ಬಾಗಿಲು ತಾಲೂಕಿನ ಮಾಕನೂರು ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಇದಕ್ಕೂ ಮೊದಲು ಇಲ್ಲಿಯ ಕೋಡಿಯಾಲ- ಹೊಸಪೇಟೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಿಂದ ಪ್ರತಿಭಟನೆ ರ್ಯಾಲಿ ಆರಂಭಿಸಿದ ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಮಾಕನೂರ ಕ್ರಾಸ್ಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರೂ ಭಾಗವಹಿಸಿದ್ದರು.ಈ ಸಮಯದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆಯ ರೈತರಿಗೆ ಒಂದು ನ್ಯಾಯ ಹಾಗೂ ಹಾವೇರಿ ರೈತರಿಗೆ ಮತ್ತೊಂದು ನ್ಯಾಯ ಮಾಡುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಕಬ್ಬು, ಭತ್ತ, ಮೆಕ್ಕೆಜೋಳ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬೆಳಗಾವಿ ಕಬ್ಬು ಬೆಳೆಗಾರರಿಗೆ ನೀಡಿದ ದರವನ್ನು ಹಾವೇರಿ ಬೆಳೆಗಾರರಿಗೂ ನೀಡಬೇಕು. ಜಿಲ್ಲೆಯಲ್ಲಿ ಕಬ್ಬು, ಭತ್ತ ಹಾಗೂ ಮೆಕ್ಕೆಜೋಳ ಪ್ರಮುಖ ಬೆಳೆಗಳಾಗಿವೆ. ಶೇ. 80ರಷ್ಟು ರೈತರು ಈ ಬೆಳೆಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಬೆಳೆ ಚೆನ್ನಾಗಿ ಬೆಳೆದರೂ ರೈತರಿಗೆ ಬೆಲೆ ದೊರೆಯುತ್ತಿಲ್ಲ. ಹೀಗಾಗಿ ರೈತ ಸರಣಿ ಆತ್ಮಹತ್ಯೆ ಪ್ರಕರಣ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹3500 ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ₹3 ಸಾವಿರ ಹಾಗೂ ಭತ್ತಕ್ಕೆ ₹3300 ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ, ರಟ್ಟೀಹಳ್ಳಿ ಕಬ್ಬಿಣಕಂತಿಮಠ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಅರುಣಕುಮಾರ ಪೂಜಾರ, ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ರೈತ ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ, ನಿಂಗರಾಜ ಕೋಡಿಹಳ್ಳಿ, ಚೋಳಪ್ಪ ಕಸವಾಳ, ಪ್ರಕಾಶ ಪೂಜಾರ, ಪರಮೇಶಣ್ಣ ಗೂಳಣ್ಣನವರ, ಮೌನೇಶ ತಳವಾರ, ವಿಜಯಕುಮಾರ, ಮಾಳಪ್ಪ ಪೂಜಾರ, ಕುಬೇರಪ್ಪ ಕೊಂಡಜ್ಜಿ, ಚೇತನ ಪೂಜಾರ, ಪವನಕುಮಾರ ಮಲ್ಲಾಡದ, ಚಂದ್ರಣ್ಣ ಬೇಡರ, ಕರಬಸಪ್ಪ ಕೂಲೇರ, ನಾಗರಾಜ ಕುಡಪಲಿ, ಹೊನ್ನಪ್ಪ ಮರಿಯಮ್ಮನವರ, ನಿತ್ಯಾನಂದ ಕುಂದಾಪುರ, ಹರಿಹರಗೌಡ ಪಾಟೀಲ ಹಾಗೂ ಎಪಿಎಂಸಿ ಹಮಾಲಿ ಕಾರ್ಮಿಕರ ಸಂಘ, ದಲಾಲರ ಸಂಘ, ಬೀಜೋತ್ಪಾದಕರ ಸಂಘ, ವಿವಿಧ ಮಹಿಳಾ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))