ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿ, ಜಿಲ್ಲಾ ಉಸ್ತುವಾರಿ ಮಂತ್ರಿಯನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಗೇಂದ್ರ ಬೆಂಬಲಿಗರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿ, ಜಿಲ್ಲಾ ಉಸ್ತುವಾರಿ ಮಂತ್ರಿಯನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಗೇಂದ್ರ ಬೆಂಬಲಿಗರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಶಾಸಕ ನಾಗೇಂದ್ರ ಅವರು ಜಿಲ್ಲೆಯಲ್ಲಿ ಪಕ್ಷಕ್ಕೆ ನೇತೃತ್ವ ನೀಡುವ ಸಮರ್ಥ ವ್ಯಕ್ತಿಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದಲ್ಲಿ ಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತಗೊಂಡು ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ. ಈಗಾಗಲೇ ಜಿಲ್ಲಾ ಮಂತ್ರಿಯಾಗಿ ಸೇವೆ ಸಲ್ಲಿಸಿ ಅನುಭವ ಇರುವ ನಾಗೇಂದ್ರ ಅವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸುವುದರಿಂದ ಈ ಭಾಗದ ಜನರ ನಿರೀಕ್ಷೆಯಂತೆ ಬಳ್ಳಾರಿ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಎಲ್ಲ ಸಮುದಾಯಗಳ ಜತೆ ಸಮನ್ವಯತೆಯಿಂದಿರುವ ನಾಗೇಂದ್ರ ಅವರ ನೇಮಕದಿಂದ ಬರುವ ಎಲ್ಲ ಚುನಾವಣೆಗಳಲ್ಲೂ ಕಾಂಗ್ರೆಸ್‌ಗೆ ದೊಡ್ಡ ಬಲ ಸಿಗಲಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಇಲ್ಲಿನ ನಗರೂರು ನಾರಾಯಣರಾವ್ ಪಾರ್ಕ್‌ನಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಗಡಗಿ ಚನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಶಾಸಕ ನಾಗೇಂದ್ರ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ನೇಮಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ಯುವ ಮುಖಂಡ ಸಂಗನಕಲ್ಲು ವಿಜಯಕುಮಾರ್, ವೈ. ಶಿವಕುಮಾರ್, ಮಹಾನಗರ ಪಾಲಿಕೆ ಸದಸ್ಯ ನಾಗಲಕೆರೆ ಗೋವಿಂದ, ಮೋಕಾ ಮುದಿ ಮಲ್ಲಯ್ಯ, ನಾಗಭೂಷಣಗೌಡ, ಬಿ.ಎಂ. ಪಾಟೀಲ್, ಮಲ್ಲಿಕಾರ್ಜುನ, ಕನಕ, ಮಲ್ಲೇಶ್ವರಿ, ವೀರನಗೌಡ, ಅಮರಾಪುರ ಗಾದಿಲಿಂಗ, ಅಸುಂಡಿ ಹನುಮೇಶ್ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.