ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಮೈಕ್ರೋ ಫೈನಾನ್ಸ್ಗಳಿಗೆ ಹಾವಳಿ ತಪ್ಪಿಸುವುದು ಹಾಗೂ ರೈತರ ಪಹಣಿಗಳಲ್ಲಿ ವಕ್ಫ್ ಹೆಸರು ನಮೂದಾಗುತ್ತಿರುವುದನ್ನು ಕೂಡಲೇ ತೆಗೆದುಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ (ಮೂಲ ಸಂಘಟನೆ) ಮಂಗಳವಾರ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸಂಘದ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿ ಮನವಿ ಸಲ್ಲಿಸಿದರು. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗಿದರು.
ಜಿಲ್ಲೆಯಲ್ಲಿ ಶೀಘ್ರವೇ ಭತ್ತ ಖರೀದಿ ಕೇಂದ್ರಗಳನ್ನು ತೆರೆದು ಖರೀದಿ ಮಾಡಬೇಕು. ಪ್ರತಿ ಕ್ವಿಂಟಲ್ ಭತ್ತಕ್ಕೆ ಕೇಂದ್ರ ನೀಡುವ ದರದ ಜೊತೆಗೆ ರಾಜ್ಯ ಸರ್ಕಾರ ೭೦೦ ರು. ಪ್ರೋತ್ಸಾಹ ಧನ ನೀಡುವುದು. ಭತ್ತ ಕಟಾವು ಯಂತ್ರದ ಬಾಡಿಗೆ ದರ ದುಬಾರಿಯಾಗಿದ್ದು, ಕೃಷಿ ಇಲಾಖೆ ಏಕದರ ನಿಗದಿಪಡಿಸುವಂತೆ ಒತ್ತಾಯಿಸಿದರು.ಬೇಸಿಗೆ ಬೆಳೆ ಒಣಗದಂತೆ ಕೆಆರ್ಎಸ್ ಅಣೆಕಟ್ಟೆಯಿಂದ ಸಮರ್ಪಕವಾಗಿ ನೀರು ಹರಿಸುವುದು. ಅರ್ಧಕ್ಕೆ ಸ್ಥಗಿತಗೊಂಡಿರುವ ವಿಶ್ವೇಶ್ವರಯ್ಯ ನಾಲೆ ಕಾಮಗಾರಿ ಪೂರ್ಣಗೊಳಿಸಬೇಕು ಜೊತೆಗೆ ಉಪಕಾಲುವೆಗಳನ್ನು ದುರಸ್ತಿಗೊಳಿಸಿ ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸಲು ಕ್ರಮ ವಹಿಸುವಂತೆ ಆಗ್ರಹಿಸಿದರು.
ಕಬ್ಬು ಬೆಳೆ ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ಎಫ್ಆರ್ಪಿ ದರವನ್ನು ಕಬ್ಬು ಆಧಾರಿತ ಉಪ ಉತ್ಪನ್ನಗಳ ಬೆಲೆಗಳ ಆಧಾರದ ಮೇಲೆ ಪ್ರತಿ ಟನ್ಗೆ ೪೫೦೦ ರು. ನಿಗದಿಪಡಿಸುವುದು. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಸಾಲ ಪಡೆಯಲು ದಾಖಲಾತಿ ಒದಗಿಸಲು ರೈತರಿಗೆ ಕಷ್ಟವಾಗುತ್ತಿರುವುದರಿಂದ ದಾಖಲಾತಿ ಸರಳೀಕರಣ ಮಾಡಿ ಶೂನ್ಯ ಬಡ್ಡಿ ದರದಲ್ಲಿ ೧೦ ಲಕ್ಷ ರು. ವರೆಗೆ ಬೆಳೆ ಸಾಲ ನೀಡಲು ಮುಂದಾಗಬೇಕು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ರೈತರು, ಸ್ತ್ರೀ ಶಕ್ತಿ ಮತ್ತು ಮಹಿಳಾ ಸಂಘಗಳ ಸದಸ್ಯರ ಆಧಾರ್ ಕಾರ್ಡ್ ಆಧಾರವಾಗಿಟ್ಟುಕೊಂಡು ಸಾಲ ನೀಡುತ್ತಿದ್ದು, ಇದರಿಂದ ಸಾಲದ ಕಂತು ಪಾವತಿ ಮಾಡಲು ಸಾಧ್ಯವಾಗದ ಹಲವರು ಆತ್ಮಹತ್ಯೆಗೆ ಶರಣಾಗುತ್ತಿರುವುದರಿಂದ ಮೈಕ್ರೋ ಫೈನಾನ್ಸ್ ಸಾಲ ವಸೂಲಿದಾರರು ಹಾಗೂ ಮುಖ್ಯಸ್ಥರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.ಕೇಂದ್ರ ಸರ್ಕಾರ ರೈತರ ಬೇಡಿಕೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಹರಿಯಾಣದ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ರೈತರ ಬೇಡಿಕೆಗಳಾದ ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ರೈತರ ಸಂಪೂರ್ಣ ಸಾಲಮನ್ನಾ, ಫಸಲ್ ಭೀಮ ಬೆಳೆ ವಿಮೆ ಪದ್ಧತಿ ನೀತಿ ಬದಲಾವಣೆ, ೬೦ ವರ್ಷ ಪೂರೈಸಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗುವಂತೆ ಆಗ್ರಹಪಡಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಕಾರ್ಯದರ್ಶಿ ಎಸ್.ಮಂಜೇಶ್ಗೌಡ, ಉಪಾಧ್ಯಕ್ಷ ಕೆ. ನಾಗೇಂದ್ರಸ್ವಾಮಿ, ಸೋ.ಶಿ.ಪ್ರಕಾಶ್, ಎಚ್.ಜೆ. ಪ್ರಭುಲಿಂಗು, ಎಲ್.ಸುರೇಶ್, ಸಿದ್ದೇಗೌಡ, ಇಂಡುವಾಳು ಬಸವರಾಜು, ಕೆ.ಜೆ.ಉಮೇಶ್, ಅಣ್ಣೂರು ಮಹೇಂದ್ರ ಎಚ್.ಜೆ.ಪ್ರಭುಲಿಂಗು ಮತ್ತಿತರರಿದ್ದರು.