ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

| Published : Dec 15 2024, 02:01 AM IST

ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ಈ ಹಿಂದೆ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ೧೬೦೦ ಕೋಟಿ ರು. ಗಳನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲವಾದರೆ ನಿಗಮಗಳನ್ನು ಮುಚ್ಚಿಬಿಡಿ ಎಂದು ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಘಟಕದಿಂದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ ೬೦೬೫ ಅರ್ಜಿಗಳು ಸಲ್ಲಿಕೆಯಾದರೂ ಒಂದು ಪೈಸೆ ಹಣವು ಕೂಡಾ ಬಿಡುಗಡೆ ಮಾಡದೇ ಇರುವುದು ಈ ರೀತಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಅನ್ಯಾಯವನ್ನು ಬಿಜೆಪಿ ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಮೋರ್ಚಾ ಬಲವಾಗಿ ಖಂಡಿಸುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ಈ ಹಿಂದೆ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ೧೬೦೦ ಕೋಟಿ ರು. ಗಳನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲವಾದರೆ ನಿಗಮಗಳನ್ನು ಮುಚ್ಚಿಬಿಡಿ ಎಂದು ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಘಟಕದಿಂದ ಶುಕ್ರವಾರ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್‌. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂತು. ಇದೇ ವೇಳೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಆರ್‌. ಜಯಣ್ಣ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡಿ ಇಲ್ಲವೆ ನಿಗಮಗಳನ್ನು ಮುಚ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅದರಂತೆ ಹಾಸನ ಜಿಲ್ಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ಪ್ರತಿಭಟನೆ ನಡೆಸಿ ನಿಗಮಗಳಿಗೆ ಹಣ ಬಿಡುಗಡೆ ಮಾಡುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ ಎಂದರು. ಅಹಿಂದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದಿರುವ ತಾವುಗಳು ಹಿಂದುಳಿದ ವರ್ಗಗಳ ಜನರ ಆರ್ಥಿಕ, ಔದ್ಯೋಗಿಕ, ಕೃಷಿ ಮತ್ತು ಶಿಕ್ಷಣಕ್ಕಾಗಿ ನಿಗಮಗಳಿಗೆ ಹಣ ಬಿಡುಗಡೆ ಮಾಡದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ೧೦೦೦ ಕೋಟಿಗೂ ಹೆಚ್ಚು ಅನುದಾನವನ್ನು ಡಿ. ದೇವರಾಜ ಅರಸು, ಒಕ್ಕಲಿಗ, ವಿಶ್ವಕರ್ಮ, ವೀರಶೈವ ಲಿಂಗಾಯಿತ. ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ ಅರೆ ಅಲೆಮಾರಿ, ಮಡಿವಾಳ ಮಾಚಿ ದೇವ ಮತ್ತು ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಹಣ ಬಿಡುಗಡೆ ಮಾಡಿತ್ತು. ಆದರೆ ತಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ೧೬೦೦ ಕೋಟಿ ಬಜೆಟ್‌ನಲ್ಲಿ ಘೋಷಣೆ ಮಾಡಿ ಕೇವಲ ೫೭.೦೪ ಕೋಟಿ ರುಪಾಯಿ ಮಾತ್ರ ವೆಚ್ಚ ಮಾಡಿ ಮೋಸ ಮಾಡಿರುವುದು ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ ೬೦೬೫ ಅರ್ಜಿಗಳು ಸಲ್ಲಿಕೆಯಾದರೂ ಒಂದು ಪೈಸೆ ಹಣವು ಕೂಡಾ ಬಿಡುಗಡೆ ಮಾಡದೇ ಇರುವುದು ಈ ರೀತಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಅನ್ಯಾಯವನ್ನು ಬಿಜೆಪಿ ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಮೋರ್ಚಾ ಬಲವಾಗಿ ಖಂಡಿಸುತ್ತದೆ ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲೆಮರೆ ಕಾಯಿಯಂತೆ ಇರುವ ಅತ್ಯಂತ ಹಿಂದುಳಿದ ಸಮುದಾಯಗಳಾದ ಹೂಗಾರ, ಕಂಬಾರ, ಕುಂಬಾರ, ಗಾಣಿಗ, ಈಡಿಗ ಮತ್ತು ಮಾಳಿ ಸಮುದಾಯಗಳು ಕೂಡಾ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ಬರಬೇಕೆಂದು ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಬಿಜೆಪಿ ಸರಕಾರ ಸ್ಥಾಪಿಸಿತ್ತು. ಆದರೆ ತಮ್ಮ ಸರ್ಕಾರ ಇಂತಹ ಸಣ್ಣ ಸಣ್ಣ ಹಿಂದುಳಿದ ಸಮುದಾಯಗಳ ನಿಗಮಗಳಿಗೆ ಒಂದು ಪೈಸೆ ಹಣ ಬಿಡುಗಡೆ ಮಾಡದೆ ಅನ್ಯಾಯ ಮಾಡಲಾಗಿರುತ್ತದೆ. ಹೀಗಾಗಿ ಈ ನಿಗಮಗಳಿಗೆ ಹಣವನ್ನು ಮಂಜೂರಾತಿ ಮಾಡಲು ಈ ಪ್ರತಿಭಟನೆ ಮುಖಾಂತರ ಒತ್ತಾಯಿಸುತ್ತಿದ್ದೇವೆ. ಆದ್ದರಿಂದ ಸನ್ಮಾನ್ಯ ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ತಾವು ಈ ಹಿಂದೆ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ೧೬೦೦ ಕೋಟಿ ಕೂಡಲೇ ಬಿಡಡುಗಡೆ ಮಾಡಿ ಅವರ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳಿಗೆ ಅನುಕೂಲ ಮಾಡಬೇಕೆಂದು ಈ ಪ್ರತಿಭಟನೆ ಮುಖಾಂತರ ಒತ್ತಾಯಿಸುವುದಾಗಿ ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಒಬಿಸಿ ರಾಜ್ಯ ಕಾರ್ಯದರ್ಶಿ ಡಿ. ಪ್ರಸನ್ನಕುಮಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೀವ್, ಎಚ್.ಪಿ. ದೀಪಕ್, ಯುವ ಮೋರ್ಚಾ ಉಪಾಧ್ಯಕ್ಷ ಹರ್ಷಿತ್, ರಾಹುಲ್ ಕಿಣಿ, ಉಪಾಧ್ಯಕ್ಷ ಪುರುಷೋತ್ತಮ್, ಚನ್ನಕೇಶವ, ಪ್ರೇಮ್, ಸತೀಶ್, ಗಜೇಂದ್ರ ಇತರರು ಉಪಸ್ಥಿತರಿದ್ದರು.

-----

ಫೋಟೋ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಘಟಕದಿಂದ ಶುಕ್ರವಾರ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು.