ಸಾರಾಂಶ
ರೋಣ: ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ನೆಪದಲ್ಲಿ ವಿದ್ಯಾರ್ಥಿಗಳಿಂದ ಭಾರಿ ಪ್ರಮಾಣದ ದುಡ್ಡು ಪಡೆಯುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಗುರುವಾರ ರೋಣ ಪಟ್ಟಣದ ಮುಲ್ಲಾನಬಾವಿ ವೃತ್ತ, ಪೋತರಾಜನ ಕಟ್ಟೆ ಮತ್ತು ಸೂಡಿ ವೃತ್ತದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಗದಗ ಜಿಲ್ಲಾಧ್ಯಕ್ಷ ಸುರೇಶ ಚಲವಾದಿ, ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ನೆಪದಲ್ಲಿ ಬಡವರ ರಕ್ತ ಹೀರುತ್ತಿದ್ದು, ಇದರಿಂದಾಗಿ ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗದ ಕನಸು ಕಮರಿ ಹೋಗುತ್ತಿದೆ. ಕೂಲಿ ಮಾಡಿ ಜೀವನ ಸಾಗಿಸುವ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆಯಲು ಲಕ್ಷ ಲಕ್ಷ ದುಡ್ಡು ತರಬೇಕಾದ ಪರಿಸ್ಥಿತಿ ಎದುರಾಗಿದ್ದರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರೋಣ ತಾಲೂಕು ಸಂಚಾಲಕ ಹನುಮಂತ ಚಲವಾದಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಹಣ ಮಾಡುವ ಉದ್ಯಮಗಳಂತೆ ಬದಲಾಗುತ್ತಿದ್ದು, ಇದರಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಜೊತೆಗೆ ಸರ್ಕಾರದ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಮೂಲಭೂತ ಸೌಲಭ್ಯಗಳ ಕೊರತೆ ಅನುಭವಿಸುತ್ತಿದ್ದು, ಕೂಡಲೇ ವಿದ್ಯಾರ್ಥಿ ನಿಲಯದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಸುಸಜ್ಜಿತ ಗ್ರಂಥಾಲಯ ಶುಚಿಯಾದ ಆಹಾರ ನೀಡಬೇಕು ಎಂದು ಆಗ್ರಹಿಸಿದರು.
ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮೈಲಾರಪ್ಪ ಚಳ್ಳಮರದ, ಮಲ್ಲು ಮಾದರ, ಭೀಮಪ್ಪ ಮಾದರ, ಅಭಿಷೇಕ ಕೊಪ್ಪದ, ರಮೇಶ ನಂದಿ ಸೇರಿದಂತೆ ವಿವಿದ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.