ಸಾರಾಂಶ
ನ್ಯಾ. ಸದಾಶಿವ ಆಯೋಗದ ವರದಿಯ ಪರಿಷ್ಕರಣೆಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಕೊಲಂಭೋ ಸಮುದಾಯದ ಮುಖಂಡರು ಶನಿವಾರ ಹರಪನಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಹರಪನಹಳ್ಳಿ: ನ್ಯಾ. ಸದಾಶಿವ ಆಯೋಗದ ವರದಿಯ ಪರಿಷ್ಕರಣೆಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಕೊಲಂಭೋ ಸಮುದಾಯದ ಮುಖಂಡರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಹರಿಹರ ವೃತ್ತದಿಂದ ಹೊಸಪೇಟೆ ರಸ್ತೆಯ ಮೂಲಕ ತಹಸೀಲ್ದಾರ್ ಕಚೇರಿ ವರೆಗೂ ಮೆರವಣಿಗೆ ಮೂಲಕ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಬಳಿಕ ಮಾತನಾಡಿದ ಪ್ರತಿಭಟನಾಕಾರರು ಸದಾಶಿವ ಆಯೋಗದ ಒಳ ಮೀಸಲಾತಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಜ. 18ರಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿರುವುದು ಬಂಜಾರ, ಭೋವಿ, ಕೊರಚ, ಕೊರಮ ಸೇರಿದಂತೆ ನೂರಕ್ಕೂ ಹೆಚ್ಚು ಸಮುದಾಯಗಳಿಗೆ ದ್ರೋಹ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಬಿಜೆಪಿ ಸರ್ಕಾರವು ಈ ವಿಚಾರವನ್ನು ಮುನ್ನೆಲೆಗೆ ತಂದಾಗ ನಮ್ಮ ಸಮುದಾಯಗಳು ಅವರನ್ನು ಸೋಲಿಸಿ ನಿಮ್ಮ ಕಾಂಗ್ರೆಸ್ ಸರ್ಕಾರ ಬರಲು ಕಾರಣೀಭೂತರಾಗಿದ್ದಾರೆ. ಆದರೆ ನಮ್ಮ ಸಹೋದರ ಸಮುದಾಯಗಳ ಒಗ್ಗಟ್ಟನ್ನು ಒಡೆದು ಹಾಕಲು ಒಳ ಮೀಸಲಾತಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿರುವುದು ಖಂಡನೀಯ ಎಂದರು.ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವ ಸದಾಶಿವ ಆಯೋಗದ ಒಳ ಮೀಸಲಾತಿ ವರದಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಅಗ್ರಹಿಸಿದರು.ಪ್ರತಿಭಟನೆಯಲ್ಲಿ ಎಸ್.ಪಿ. ಲಿಂಬ್ಯಾನಾಯ್ಕ್, ಅಗ್ರಹಾರ ಅಶೋಕ, ಎಲ್. ಮಂಜ್ಯಾನಾಯ್ಕ್, ಗುರುಸಿದ್ದಪ್ಪ, ಅಜ್ಜಯ್ಯ, ವಿನಾಯಕ ಭಜಂತ್ರಿ, ಬಸವರಾಜನಾಯ್ಕ್, ರವಿನಾಯ್ಕ್, ವೀರೇಶನಾಯ್ಕ, ಪಂಪಾನಾಯ್ಕ್, ಕೊಟ್ರೇಶ ಇದ್ದರು.