ಕನ್ನಡಪ್ರಭ ವಾರ್ತೆ ಹಾಸನ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಹಾಗೂ ಜೆಇಇ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವಂತೆ ಒತ್ತಾಯಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಜುಲೈ 20ರಂದು ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರವಾದಿ ಹಾಗೂ ವಕೀಲ ಕಿಶೋರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸ ಮನನ ಶನಿವಾರ ಮಾತನಾಡಿದ ಅವರು, ಜುಲೈ 20ರಂದು ಬೆಳಿಗ್ಗೆ 11 ಗಂಟೆಗೆ ಹೇಮಾವತಿ ಪ್ರತಿಮೆ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಯಲಿದೆ ಎಂದು ಮಾಹಿತಿ ನೀಡಿ, ದೇಶದ ಲಕ್ಷಾಂತರ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದ ಕನಸನ್ನು ನನಸಾಗಿಸಿಕೊಳ್ಳಲು ಹಗಲಿರುಳು ಶ್ರಮಿಸಿ ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ಅವರ ಪರಿಶ್ರಮಕ್ಕೆ ಧಕ್ಕೆ ತಂದು, ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸಿವೆ. ಇಂತಹ ಘಟನೆಗಳಿಂದ ಅನೇಕ ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾಗಿರುವುದು ಕಳವಳಕಾರಿ ಎಂದರು.
ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ನೈತಿಕ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಸಚಿವರು ಹೊತ್ತುಕೊಳ್ಳಬೇಕು. ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬುದು ವಿದ್ಯಾರ್ಥಿ ಸಮುದಾಯದ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು. ಇದೇ ಬೇಡಿಕೆಯನ್ನು ಮುಂದಿಟ್ಟು ಲಡಾಖ್ನ ವಿಜ್ಞಾನಿ, ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ಪ್ರೇಮಿ ಸೋನಮ್ ವಾಂಚುಕ್ ದೆಹಲಿಯ ಜಂತರ್-ಮಂತರ್ನಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ನ್ಯಾಯಯುತ ಪರೀಕ್ಷಾ ವ್ಯವಸ್ಥೆಗಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ದೇಶದ ಜನತೆ ಬೆಂಬಲ ನೀಡಬೇಕಿದೆ ಎಂದು ಅವರು ಕರೆ ನೀಡಿದರು.ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತಪಡಿಸುವುದಷ್ಟೇ ಸಾಕಾಗುವುದಿಲ್ಲ. ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ಜನರು ನೇರವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಧ್ವನಿಯನ್ನು ಸರ್ಕಾರದ ಗಮನಕ್ಕೆ ತರಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪಾರದರ್ಶಕ ಪರೀಕ್ಷಾ ವ್ಯವಸ್ಥೆಗಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಂಸತ್ ಅಧಿವೇಶನ ಆರಂಭವಾಗುವ ಜುಲೈ 20ರಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯಲಿದ್ದು, ಅದರ ಭಾಗವಾಗಿ ಹಾಸನದಲ್ಲಿಯೂ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಚಿತ್ರಕಲಾವಿದ ಬಿ. ಎಸ್. ದೇಸಾಯಿ, ಹಿರಿಯ ಪತ್ರಕರ್ತ ಚಲಂ ಹಾಡ್ಲಹಳ್ಳಿ, ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಆರ್. ವಿಜಯಕುಮಾರ್, ಎಸ್ಎಫ್ಐ ಜಿಲ್ಲಾಧ್ಯಕ್ಷ ಎಂ.ಜಿ. ಪೃಥ್ವಿ, ಸಿಐಟಿಯು ಕಾರ್ಯದರ್ಶಿ ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.