ಕನ್ನಡಪ್ರಭ ವಾರ್ತೆ ಕುಶಾಲನಗರ
ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಕೋರೆ ರಸ್ತೆ ಭಾಗದಲ್ಲಿ ನೆಲೆಕಂಡಿರುವ ಹಲವು ಕುಟುಂಬಗಳು ಹಕ್ಕುಪತ್ರದಿಂದ ವಂಚಿತರಾಗಿರುವ ಹಿನ್ನೆಲೆಯಲ್ಲಿ ಸೌಲಭ್ಯ ವಂಚಿತ ನಿವಾಸಿಗಳು ಹಕ್ಕುಪತ್ರಕ್ಕೆ ಒತ್ತಾಯಿಸಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಜಿಲ್ಲಾಧ್ಯಕ್ಷ ಎಲ್.ಎಂ.ನಾಗರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಕ್ಕುಪತ್ರ ವಂಚಿತರು ಪ್ರವಾಸಿ ಮಂದಿರ ಬಳಿಯಿಂದ ಮೆರವಣಿಗೆಯಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಬಂದು ಘೋಷಣೆಗಳನ್ನು ಕೂಗಿದರು.ನಂತರ ತಾಲೂಕು ತಹಸೀಲ್ದಾರ್ ಕಚೇರಿಗೆ ತೆರಳಿ ಕಚೇರಿ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿದರು. ಕೂಡಲೆ ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳುವಂತೆ ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಅವರ ಮೂಲಕ ಜಿಲ್ಲಾಧಿಕಾರಿ ಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಎಲ್.ಎಂ.ನಾಗರಾಜು, ಕುಶಾಲನಗರ ತಾಲೂಕು ಸುಂದರ ನಗರದ ಸರ್ವೇ ನಂಬರ್ 31/1 ರಲ್ಲಿ ಇತ್ತೀಚೆಗೆ ನೆಲೆಕಂಡ ಕೆಲವರಿಗೆ ಹಕ್ಕುಪತ್ರ ದೊರೆತಿದೆ. ಆದರೆ ಹಲವು ದಶಕಗಳಿಂದ ವಾಸಿಸುತ್ತಿರುವ 50 ಕ್ಕೂ ಅಧಿಕ ಕುಟುಂಬಗಳು ಹಕ್ಕುಪತ್ರದಿಂದ ವಂಚಿತರಾಗಿದ್ದಾರೆ. ಈ ನಡುವೆ ಅರಣ್ಯ ಇಲಾಖೆಯಿಂದ ಕೂಡ ತೊಂದರೆ ಎದುರಾಗುತ್ತಿದೆ. ಕೂಡಲೆ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಬೇಕಿದೆ. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸೌಲಭ್ಯ ವಂಚಿತ ನಿವಾಸಿಗಳು ಇದ್ದರು.