ಸಾರಾಂಶ
ಗದಗ: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೂರಾರು ಹೊರಗುತ್ತಿಗೆ ನೌಕರರು ಮತ್ತು ಗ್ರಾಮ ಕಾಯಕ ಮಿತ್ರರರಿಗೆ 5 ತಿಂಗಳ ವೇತನಕ್ಕೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ಮಳೆಯನ್ನೂ ಲೆಕ್ಕಿಸಿದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಯಿತು.
ರ್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾ ನರೇಗಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಬಾಳಿಕಾಯಿ ಮಾತನಾಡಿ, ಗ್ರಾಮೀಣಾಭಿವೃದ್ಧಿಯಲ್ಲಿ ಉದ್ಯೋಗ ಖಾತರಿ ಯೋಜನೆ ಮಹತ್ತರ ಪಾತ್ರ ವಹಿಸಿದೆ. ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಗಳಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ. ಆದರೆ, ನೌಕರರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ಆಗದೆ ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ವೇತನ ಬಾರದಿರುವುದರಿಂದ ಮಕ್ಕಳ ಶಾಲಾ ದಾಖಲಾತಿ, ಕುಟುಂಬದ ನಿರ್ವಹಣೆ, ಕೌಟುಂಬಿಕ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ ಎಂದರು.ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಹಂತದಲ್ಲಿ ಎಡಿಪಿಸಿ, ಡಿಎಂಐಎಸ್, ಡಿಐಇಸಿ, ಡಿಎಎಂ ತಾಲೂಕು ಹಂತದಲ್ಲಿ ಟಿಐಇಸಿ, ಟಿಸಿ, ಟಿಎಂಐಎಸ್, ಟಿಎಇ (ಸಿವಿಲ್, ತೋಟಗಾರಿಕೆ, ರೇಷ್ಮೆ, ಅರಣ್ಯ, ಕೃಷಿ) ವಿಭಾಗದಲ್ಲಿ ಹಾಗೂ ಗ್ರಾಮ ಕಾಯಕ ಮಿತ್ರರು ಸೇರಿ ವಿವಿಧ ಹುದ್ದೆಗಳಲ್ಲಿ 130ಕ್ಕೂ ಹೆಚ್ಚು ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಎಲ್ಲ ನರೇಗಾ ಯೋಜನೆಯ ಸಿಬ್ಬಂದಿಗೆ ಕಳೆದ 5 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ತಿಳಿಸಿದರು.ಜಿಪಂ ಸಿಇಒ ಭರತ್.ಎಸ್ ಅವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಮಾತನಾಡಿ, ರಾಜ್ಯಾದ್ಯಂತ ಸಮಸ್ಯೆ ಉದ್ಭವವಾಗಿದೆ. ಸರ್ಕಾರದ ಮಟ್ಟದಲ್ಲಿ ಇದನ್ನು ಬಗೆಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಕುಮಾರ ಪೂಜಾರ ಮಾತನಾಡಿ, ಒಂದೆರಡು ತಿಂಗಳು ವೇತನವಾಗದಿದ್ದರೆ ಸಮಸ್ಯೆ ಆಗುತ್ತದೆ. ಅಂತಹದರಲ್ಲಿ 5 ತಿಂಗಳಿನಿಂದ ವೇತನವಿಲ್ಲದೆ ಕೆಲಸ ನಿರ್ವಹಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಸರ್ಕಾರ ಕೂಡಲೇ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಸರ್ಕಾರ ವೇತನ ಪಾವತಿ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.ರಾಜ್ಯ ಗ್ರಾಪಂ ಸದಸ್ಯರ ಸಂಘದ ಜಿಲ್ಲಾಧ್ಯಕ್ಷ ಸೋಮರಡ್ಡಿ ಹಾಗೂ ಜಿಲ್ಲಾ ಸಂಘದ ನಿಕಟ ಪೂರ್ವ ಅಧ್ಯಕ್ಷ ಲಿಂಗರಾಜ ಮುದಿಗೌಡ್ರ ಮಾತನಾಡಿ, ನರೇಗಾ ನೌಕರರು ವೇತನವಿಲ್ಲದೆ ಜನವರಿ 2025ರಿಂದ ಈವರೆಗೂ ಕೆಲಸ ಮಾಡುತ್ತಿದ್ದಾರೆ. ಎಷ್ಟೊ ನೌಕರರು 4 ತಿಂಗಳಿಂದ ಕೈಗಡ ಇಲ್ಲವೆ ಬಡ್ಡಿ ಮೂಲಕ ಹಣ ಪಡೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ವೇತನ ವಿಳಂಬ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಕಳೆದ ರಾಜ್ಯ ಸರಕಾರದ ಬಜೆಟ್ನಲ್ಲಿ ನರೇಗಾ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ಆದೇಶ ಹೊರಡಿಸಿದ್ದಾರೆ. ಜೀವನ ಭದ್ರತೆ ಇಲ್ಲದೇ ಕೆಲಸ ಮಾಡುತ್ತಿರುವ ನರೇಗಾ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ ಸಿಗುವುದು ಅತ್ಯಗತ್ಯವಾಗಿದೆ ಎಂದರು.ಸಂಘದ ಜಿಲ್ಲಾ ಉಪಾಧ್ಯಕ್ಷ ಸಿದ್ದು ಗುಡಿಮನಿ, ಕಾರ್ಯದರ್ಶಿ ಅರುಣ ಸಿಂಗ್ರಿ, ಸಂಘದ ಸದಸ್ಯರಾದ ಶಾಂತಾ ತಿಮ್ಮರಡ್ಡಿ, ದಿನೇಶ ಮಲ್ಲನಗೌಡ್ರ, ಗಂಗಾಧರ ಬೇಗೂರ ಇತರರು ಮಾತನಾಡಿದರು.
ಸಂಘದ ರಾಜ್ಯ ಪ್ರತಿನಿಧಿ ಕಿರಣಕುಮಾರ ಎಸ್.ಎಚ್., ಮಲ್ಲಿಕಾರ್ಜುನ ಸರ್ವಿ, ವೀರಭದ್ರಪ್ಪ ಸಜ್ಜನ, ಮಹೇಶ ಚಿತ್ತವಾಡಗಿ, ಹನುಮಂತ ಡಂಬಳ, ಪ್ರವೀಣ ಸೂಡಿ, ವೀರೇಶ ಬಸನಗೌಡ್ರ, ವಿಜಯಲಕ್ಷ್ಮೀ ಅಂಗಡಿ, ರೇಷ್ಮಾ ಕೇಳೂರ, ಮಂಜುನಾಥ ಹಳ್ಳದ, ಗ್ರಾಮ ಕಾಯಕ ಮಿತ್ರರು ಇತರರು ಇದ್ದರು.