ಕನ್ನಡಪ್ರಭ ವಾರ್ತೆ ಮಂಡ್ಯ
ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.೧೩ರಂದು ರಾಜ್ಯಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಕನಿಷ್ಠ ವೇತನ ಜಾರಿ ಆಗ್ರಹ ಸಮಾವೇಶವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ.ರಾಜೂಗೌಡ ತಿಳಿಸಿದರು.ಕಳೆದ ಹತ್ತು ವರ್ಷಗಳಿಂದ ವಿವಿಧ ಉದ್ಯೋಗಗಳ ವೇತನವನ್ನು ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ಏರಿಸಬೇಕಿತ್ತು. ಇದಕ್ಕಾಗಿ ಕಾರ್ಮಿಕ ಸಂಘಟನೆಗಳು ಸಾಕಷ್ಟು ಹೋರಾಟ ನಡೆಸಿದ್ದವು. ನ್ಯಾಯಾಲಯದ ಮಧ್ಯಪ್ರವೇಶದೊಂದಿಗೆ ರಾಜ್ಯ ಕಾರ್ಮಿಕ ಇಲಾಖೆ ವಿವಿಧ ಉದ್ಯೋಗಗಳ ಕನಿಷ್ಠ ವೇತನವನ್ನು ಶೇ.೪೦ರಷ್ಟು ವೇತನ ಹೆಚ್ಚಳಗೊಳಿಸಿ ಮೇ ೨೨ರಂದು ಆದೇಶ ಹೊರಡಿಸಿದ್ದರೂ ಈವರೆಗೂ ಕನಿಷ್ಠ ವೇತನ ಜಾರಿಗೊಳಿಸಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈ ನಡುವೆ ಕನಿಷ್ಠ ವೇತನ ಹೆಚ್ಚಳಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲ ಖಾಸಗಿ ಉದ್ಯಮಿಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದನ್ನೇ ನೆಪವಾಗಿಟ್ಟುಕೊಂಡು ಕನಿಷ್ಠ ವೇತನ ಜಾರಿಗೆ ರಾಜ್ಯಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ. ಪರಿಷ್ಕೃತ ವೇತನ ಜಾರಿ ತಡೆಹಿಡಿಯುವಂತೆ ಇಲಾಖೆ ಮುಖ್ಯಸ್ಥರಿಗೆ ಮೌಖಿಕ ಸೂಚನೆ ನೀಡಿ ಅನ್ಯಾಯ ಮಾಡಿದೆ ಎಂದು ದೂರಿದರು.ನ್ಯಾಯಾಲಯದಲ್ಲಿ ಕನಿಷ್ಠ ವೇತನ ಜಾರಿಗೆ ವ್ಯತಿರಿಕ್ತ ಆದೇಶ ಹೊರಬಿದ್ದಲ್ಲಿ ರಾಜ್ಯಸರ್ಕಾರವೇ ನೇರ ಹೊಣೆಯಾಗಲಿದೆ. ಈ ಸಂಬಂಧ ಎಚ್ಚರಿಕೆ ನೀಡುವ ಸಲುವಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಲು ಯಾವುದೇ ಕಾನೂನಿನ ಅಡ್ಡಿ ಇಲ್ಲ. ಆದರೂ ಸರ್ಕಾರ ವೇತನ ಜಾರಿಗೊಳಿಸದೆ ಮೀನಮೇಷ ಎಣಿಸುತ್ತಿರುವುದು ನಿಜಕ್ಕೂ ಕಾರ್ಮಿಕ ವಿರೋಧಿಯಾಗಿದೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ವೆಂಕಟಲಕ್ಷ್ಮೀ, ರಾಜೇಶ್, ಚಿನ್ನರಾಜು, ಸರೋಜ ಇದ್ದರು.
ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ನಾಗಮಂಗಲ:ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಸಮುದಾಯದ ವಸತಿ ರಹಿತ ಕುಟುಂಬಗಳಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ತಿಳಿಸಿದ್ದಾರೆ.ಅರ್ಹ ಫಲಾನುಭವಿಗಳು ತಮ್ಮ ಆಧಾರ ಕಾರ್ಡ್, ಆಹಾರ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ನಿವೇಶನ ಹೊಂದಿರುವ ಬಗ್ಗೆ ದಾಖಲಾತಿ ಪ್ರತಿಯ ಜೊತೆಗೆ ಈ ಹಿಂದೆ ಇಲಾಖೆಯಿಂದ ಸಾಲ ಪಡೆದಿರುವುದಿಲ್ಲ ಎಂದು ಛಾಕಾ ಕಾಗದ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸ ಸ್ಥಳ ಪ್ರಮಾಣ ಪತ್ರ ಹಾಗೂ ಈ ಹಿಂದೆ ಯಾವುದೇ ವಸತಿ ಯೋಜನೆಯಲ್ಲಿ ಸೌಲಭ್ಯ ಪಡೆದಿಲ್ಲ ಎಂದು ಗ್ರಾಪಂನಿಂದ ದೃಢೀಕರಣದೊಂದಿಗೆ ಆ.20ರೊಳಗೆ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ, ನಾಗಮಂಗಲ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.