ಸಾರಾಂಶ
ಕುರುಬ ಹಾಗೂ ಇತರೆ ಸಮಾಜಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳ ಎದುರು ಸೆ.25ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
ಕನ್ನಡಪ್ರಭ ವಾರ್ತೆ ಹೊಸಪೇಟೆ
ಕುರುಬ ಹಾಗೂ ಇತರೆ ಸಮಾಜಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳ ಎದುರು ಸೆ.25ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಜಾತಿ ನಡುವೆ ಕಲಹ ಸೃಷ್ಟಿ ಮಾಡಲು ಹೊರಟಿದ್ದಾರೆ. ಅತ್ಯಂತ ಹಿಂದುಳಿದಿರುವ 50ಕ್ಕೂ ಹೆಚ್ಚು ಸಮುದಾಯಗಳು ಎಸ್ಟಿ ಸಮಾಜದ ಪಟ್ಟಿಯಲ್ಲಿವೆ. ಈ ಸಮುದಾಯಗಳನ್ನು ಕನಿಷ್ಠ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುವ ಹುನ್ನಾರ ನಡೆದಿದೆ.
ವಾಲ್ಮೀಕಿ ಸಮಾಜದ 14 ಜನ ಶಾಸಕರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಅವರ ಕೈಯನ್ನು ಸಿಎಂ ಸಿದ್ದರಾಮಯ್ಯನವರು ಕಟ್ಟಿ ಹಾಕಿದ್ದಾರೆ. ಶಾಸಕರು, ಎಂಎಲ್ ಸಿಗಳು ಸಹ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ವಾಲ್ಮೀಕಿ ಸಮಾಜದ ಬೆಂಬಲದಿಂದ ಶಾಸಕರಾಗಿರುವ ಅವರು ಸಮಾಜದ ಪರವಾಗಿ ನಿಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದರು.ರಾಜ್ಯ ಸರ್ಕಾರಕ್ಕೂ ಹತ್ತು ದಿನಗಳ ಗಡುವು ನೀಡಲಾಗಿದ್ದು, ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಮಾಜದ ಕಾರ್ಯದರ್ಶಿ ದೇವರಮನೆ ಶ್ರೀನಿವಾಸ್, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಬಿ.ಎಸ್. ಜಂಬಯ್ಯ ನಾಯಕ ಮಾತನಾಡಿದರು.ಮುಖಂಡರಾದ ಎಸ್.ಎಸ್. ಚಂದ್ರಶೇಖರ್, ಬೆಳಗೋಡ್ ಅಂಬಣ್ಣ, ಗುಡಿಗುಡಿ ಸೋಮನಾಥ, ಕಿನ್ನಾಳ್ ಹನುಮಂತ ಇತರರಿದ್ದರು.