ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರತಿಭಟನೆ
KannadaprabhaNewsNetwork | Published : Oct 10 2023, 01:02 AM IST
ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರತಿಭಟನೆ
ಸಾರಾಂಶ
ಹಾಸನದ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ಕರವೇ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
ಕನ್ನಡಪ್ರಭ ವಾರ್ತೆ ಹಾಸನ ಡೀಸಿ ಕಚೇರಿ ಬಳಿ ಕರವೇ ಅನಿರ್ದಿಷ್ಟಾವಧಿ ಧರಣಿಗೆ । ಪ್ರತಿಭಟನೆಗೆ ಶಾಸಕ ಎಚ್ ಡಿ ರೇವಣ್ಣ, ಬಾಳಕೃಷ್ಣ ಸಾಥ್ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ಸೋಮವಾರದಿಂದ ಡೀಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಬಣದಿಂದ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು. ಮೊದಲ ದಿನದ ಹೋರಾಟ ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಆಗಮಿಸಿ ಬೆಂಬಲ ಸೂಚಿಸಿದರು. ಘೇರಾವ್ ಎಚ್ಚರಿಕೆ: ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲು ಜಿಲ್ಲಾಡಳಿತದ ಮೂಲಕ ಗಮನ ಸೆಳೆಯಲಾಗಿದ್ದರೂ ಇದುವರೆಗೂ ಯಾವ ಪ್ರಯೋಜನವಾಗಿರುವುದಿಲ್ಲ. ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಹಾಸನ ಜಿಲ್ಲೆಯಲ್ಲಿ ಅರಕಲಗೂಡು ತಾಲೂಕು ಮಾತ್ರ ತೀವ್ರ ಬರಪಟ್ಟಿಯಲ್ಲಿದ್ದರೆ, ಉಳಿದಂತೆ ಸಕಲೇಶಪುರ, ಹೊಳೆನರಸೀಪುರ, ಚನ್ನರಾಯಪಟ್ಟಣ ಹಾಗೂ ಬೇಲೂರು ತಾಲೂಕುಗಳ ಸಾಧಾರಣ ಪಟ್ಟಿವೆ. ಬರದ ಹಣೆಪಟ್ಟಿ ಕೊಟ್ಟಿಕೊಂಡಿರುವ ಅರಸೀಕೆರೆ, ಹಾಸನ ಮತ್ತು ಆಲೂರು ತಾಲೂಕುಗಳು ಯಾವುದೇ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲದಿರುವುದಿಲ್ಲ. ಇನ್ನು ೧೮ ತಾಲೂಕುಗಳನ್ನು ಬರಪಟ್ಟಿಗೆ ಸೇರಿಸುವುದಾಗಿ ಹೇಳಿದ್ದರೂ ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸೇರಿಸಲೇಬೇಕು. ಇಲ್ಲವಾದರೇ ಯಾರಾದರೂ ಸಚಿವರು ಹಾಸನಕ್ಕೆ ಬಂದರೇ ಘೇರಾವ್ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ನಿರ್ಲಕ್ಷ್ಯ ಕಾರಣ: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರಿದರು. ಈ ಜಿಲ್ಲೆಯ ೭ ತಾಲೂಕುಗಳನ್ನು ಬರಪಟ್ಟಿಗೆಗೆ ಸೇರಿಸುವಂತೆ ಒತ್ತಾಯಿಸಿ ಸೋಮವಾರದಿಂದ ಡೀಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ರವರೆಗೂ ಮಠದ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ಸಾಹಿತಿಗಳು, ಹಾಸನ ಜಿಲ್ಲೆಯ ರೈತಪರ, ದಲಿತಪರ ಸಂಘಟನೆಗಳ ಸಹಕಾರದೊಂದಿಗೆ ಧರಣಿ ಹಮ್ಮಿಕೊಳ್ಳಲಾಗಿದ್ದು, ಬೇಡಿಕೆ ಈಡೇರುವವರೆಗೂ ಪ್ರತಿನಿತ್ಯ ಒಂದೊಂದು ಸಂಘಸಂಸ್ಥೆಗಳು ಈ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದರು. ಡೀಸಿ ಕಚೇರಿಯಲ್ಲಿ ಶಾಮಿಯಾನ ಹಾಕಿಕೊಂಡು ಕರವೇ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿಗೆ ಕುಳಿತಿದ್ದಾಗ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಆಗಮಿಸಿ ರೈತರ ಪರವಾಗಿ ಈ ಹೋರಾಟ ಅರ್ಥಪೂರ್ಣವಾಗಿದ್ದು, ಕೂಡಲೇ ಸರ್ಕಾರವು ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಇದೆ ವೇಳೆ ಒತ್ತಾಯಿಸಿದ್ದಲ್ಲದೇ ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್, ಬೋರೇಗೌಡ, ತಾಲೂಕು ಅಧ್ಯಕ್ಷ ಶಿವಣ್ಣಗೌಡ, ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ, ತೋಫಿಕ್, ಆಲ್ವೀನ್, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಮಧು, ಗಣೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತನುಗೌಡ, ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಮಂಜುನಾಥ್ ಯುವ ಮಹಿಳಾ ಘಟಕದ ಅಧ್ಯಕ್ಷೆ ದೇವಿಕಾ ಮಧು, ಅಭಿಗೌಡ, ಪ್ರೀತಂ, ವೆಂಕಟೇಶ್, ಇತರರು ಉಪಸ್ಥಿತರಿದ್ದರು.